ತುಮಕೂರು

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಮಾದರಿ ನೀತಿ ಸಂಹಿತೆ ಸಮರ್ಪಕ ಅನುಷ್ಠಾನಕ್ಕಾಗಿ ಮುಂದಿನ 45 ದಿನಗಳು ಎಲ್ಲಿಯೂ ಯಾವುದೇ ರೀತಿ ಚುನಾವಣಾ ಆಕ್ರಮ ನಡೆಯದಂತೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ಸಂಬಂಧ ಮಾದರಿ ನೀತಿ ಸಂಹಿತೆಯ ಸಮರ್ಪಕ ಅನುಷ್ಠಾನಕ್ಕಾಗಿ ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯದ ಸಭಾಂಗಣದಲ್ಲಿ ಇಂದು ಕರೆಯಲಾಗಿದ್ದ ಲೀಡ್ ಬ್ಯಾಂಕ್ ಮ್ಯಾನೇಜರ್, ಸಹಕಾರ ಸಂಘಗಳ ಉಪನಿಬಂಧಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಮತ್ತು ಆಹಾರ ಇಲಾಖೆಯ ಜಂಟಿ ನಿರ್ದೇಶಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಾನ್ ಬ್ರೋಕರ್‍ಗಳು ಮತ್ತು ಇತರೆ ಲೇವಾದೇವಿದಾರರಿಗೆ ಚುನಾವಣಾ ನೀತಿ ಸಂಹಿತೆ ಕುರಿತು ಮಾಹಿತಿ ನೀಡುವುದು. ಅವರ ದಿನನಿತ್ಯದ ವಹಿವಾಟುಗಳ ಬಗ್ಗೆ ಗಮನವಹಿಸಿ ಅಕ್ರಮ ಹಣ ವರ್ಗಾವಣೆಯಾಗದಂತೆ ತಡೆಯುವುದು ಎಂದು ತಿಳಿಸಿದರು.
ಪೆಟ್ರೋಲ್ ಬಂಕ್‍ಗಳಲ್ಲಿ ಜಮೆಯಾಗಿರುವ ಹಣ ಹಾಗೂ ಪ್ರತಿ ದಿನ ಲಭ್ಯವಿರುವ ದಾಸ್ತಾನಿನ ಮಾಹಿತಿಯನ್ನು ಪ್ರತಿ ದಿನ ಸಲ್ಲಿಸುವುದು. ಪೆಟ್ರೋಲ್ ಬಂಕ್‍ಗಳಲ್ಲಿ ಯಾವುದೇ ಟೋಕನ್ ಆಧರಿಸಿ ಪೆಟ್ರೋಲ್ ನೀಡುವುದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ ಎಂದು ಪೆಟ್ರೋಲ್ ಬಂಕ್ ಮಾಲೀಕರಿಗೆ ತಿಳಿಸಿ ಹೇಳುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ ಅವರು ಮಾತನಾಡಿ, ಸ್ತ್ರೀಶಕ್ತಿ ಅಥವಾ ಸ್ವಸಹಾಯ ಸಂಘಗಳ ಖಾತೆಗೆ ಅನಾಮಧೇಯ ವ್ಯಕ್ತಿಗಳಿಂದ ಜಮೆಯಾದ ಮೊತ್ತದ ಬಗ್ಗೆ ಮಾಹಿತಿ ನೀಡುವುದು. ಸ್ತ್ರೀಶಕ್ತಿ ಸಂಘಗಳಿಗೆ ರಾಜಕೀಯ ವ್ಯಕ್ತಿಗಳಿಂದ ತಮ್ಮ ಖಾತೆಗಳಿಗೆ ಹಣ ಜಮೆ ಮಾಡುವುದು ಚುನಾವಣಾ ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಎಂದು ತಿಳುವಳಿಕೆ ನೀಡುವುದು. ಎಟಿಎಂಗಳಿಗೆ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಉಪಯೋಗಿಸುವುದು ಎಂದು ತಿಳಿಸಿದರು.
ನ್ಯಾಯಬೆಲೆ ಅಂಗಡಿಗಳಲ್ಲಿ ರಾಜಕೀಯ ಪಕ್ಷಗಳಿಂದ ಅಥವಾ ಅಭ್ಯರ್ಥಿಗಳಿಂದ ಉಚಿತವಾಗಿ ಯಾವುದೇ ವಸ್ತುಗಳು ವಿತರಣೆಯಾಗದಂತೆ ನೋಡಿಕೊಳ್ಳತಕ್ಕದ್ದು. ಸರ್ಕಾರದಿಂದ ವಿತರಣೆಯಾಗುವ ವಸ್ತುಗಳಲ್ಲಿ ಯಾವುದೇ ರಾಜಕೀಯ ವ್ಯಕ್ತಿಗಳ ಭಾವಚಿತ್ರ ಇರದ ಹಾಗೆ ನೋಡಿಕೊಳ್ಳುವುದು. ನ್ಯಾಯಬೆಲೆ ಅಂಗಡಿಗಳಲ್ಲಿ ಸಂಗ್ರಹಿಸುವ ಹಣ ವಿಪರೀತ ಹೆಚ್ಚಾದಲ್ಲಿ ಅಥವಾ ಕಡಿಮೆಯಾದಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಮಾಹಿತಿ ನೀಡುವಂತೆ ಸೂಚಿಸಿದರು.
ಅಭ್ಯರ್ಥಿಗಳಿಗೆ ಸಂಬಂಧಿಸಿದ ಹಾಗೆ ಅವರ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತ ಖರ್ಚು ಆದಲ್ಲಿ, 10 ಲಕ್ಷಕ್ಕಿಂತ ಹೆಚ್ಚಿನ ಮೊತ್ತದ ವಹಿವಾಟುಗಳು ನಡೆದಲ್ಲಿ ಅದನ್ನು ಚುನಾವಣಾಧಿಕಾರಿಗಳ ಗಮನಕ್ಕೆ ತರುವಂತೆ ಬ್ಯಾಂಕರ್ಸ್‍ಗಳಿಗೆ ಸೂಚಿಸಿದರು.

(Visited 2 times, 1 visits today)