ತುಮಕೂರು :

 

     ಪರವಾನಗಿ ನವೀಕರಣ ಮಾಡಿಸಿಕೊಳ್ಳದೇ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ವ್ಯಕ್ತಿಯ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

       ತಾಲ್ಲೂಕಿನ ಕೋರ ಹೋಬಳಿಯ ನರಸೀಪುರ ಗ್ರಾಮದ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಉಪಾಧೀಕ್ಷಕರಾದ ಬಿ.ಉಮಾಶಂಕರ್ ರವರು ಮಾಹಿತಿ ಸಂಗ್ರಹಿಸಿ ಬೆಳಧರ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಮೋಹನ್ ಎಂಬುವವರು ಕಲ್ಲು ಗಣಿಗಾರಿಕೆ ನಡೆಸಲು 2011 ರಿಂದ 2016 ರವರೆಗೂ ಪರವಾನಗಿ ಪಡೆದಿದ್ದು, 2016 ರ ನಂತರ ಪರವಾನಗಿ ಅವಧಿ ಮುಕ್ತಾಯವಾಗಿದ್ದರೂ ಪರವಾನಗಿ ನವೀಕರಣ ಮಾಡಿಸಿಕೊಳ್ಳದೇ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಾ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡುತ್ತಿರುವುದನ್ನು ಪತ್ತೆ ಹಚ್ಚಲಾಗಿತ್ತು.

      ಇಂದು ಬೆಳಗ್ಗೆ 10.30 ಕ್ಕೆ ಎಸಿಬಿ ಡಿವೈಎಸ್ಪಿ ರವರು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮತ್ತು ಕಂದಾಯ ಲಾಖೆ ಅಧಿಕಾರಿಗಳೊಂದಿಗೆ ಬೆಳಧರ ಬಳಿ ನರಸೀಪುರ ಗ್ರಾಮದ ಸರ್ವೆ ನಂ.8ರಲ್ಲಿ ನಡೆಸುತ್ತಿದ್ದ ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ದಾಳಿ ನಡೆಸಿದ್ದು ಕಲ್ಲು ಗಣಿಗಾರಿಕೆ ನಡೆಸಲು ಬಳಸುತ್ತಿದ್ದ ಪರಿಕರಗಳನ್ನು ವಶಕ್ಕೆ ಪಡೆಯಲಾಗಿರುತ್ತೆ. ಅಲ್ಲದೇ ಕಂಬದ ನರಸಿಂಹಸ್ವಾಮಿ ದೇವಸ್ಥಾನದ ಬಳಿ ಬೆಳಧರ ಸ.ನಂ. 12/1 ರ ಜಮೀನಿನಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಸುಮಾರು 9 ಲಕ್ಷ ರೂ. ಮೌಲ್ಯದ ಕಲ್ಲನ್ನು ಜಪ್ತಿ ಮಾಡಿ ಮುಂದಿನ ಕ್ರಮ ಜರುಗಿಸುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದೆ.

(Visited 2,608 times, 1 visits today)