ತುಮಕೂರು:

       ಜಿಲ್ಲೆಯಲ್ಲಿ ಹೋಂ ಐಸೋಲೇಷನ್/ಹೋಂ ಕ್ವಾರಂಟೈನಲ್ಲಿರುವ ಸೋಂಕಿತರನ್ನು ಕೂಡಲೇ ಕೋವಿಡ್ ಕೇರ್ ಸೆಂಟರ್‍ಗಳಿಗೆ ಸ್ಥಳಾಂತರಿಸಬೇಕು ಹಾಗೂ ಸೋಂಕಿತರ ಸೋಂಕಿನ ಮೂಲವನ್ನು ಪತ್ತೆ ಹಚ್ಚಬೇಕು ಎಂದು ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

       ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ತಡೆಗಟ್ಟುವಿಕೆ, ನಿರ್ವಹಣೆ ಕುರಿತಂತೆ ಚಿಕ್ಕನಾಯಕನಹಳ್ಳಿಯ ತಾಲೂಕು ಕಚೇರಿಯ ಕೆಸ್ವಾನ್ ಮೂಲಕ ಕಂದಾಯ, ಆರೋಗ್ಯ, ನಗರ ಸ್ಥಳೀಯ ಸಂಸ್ಥೆ ಹಾಗೂ ಪಂಚಾಯತ್ ರಾಜ್ ಇಲಾಖೆಯ ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸಿದರು.

      ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಹೆಚ್ಚಿನ ಗಮನ ಹರಿಸಬೇಕು. ಹೋಂ ಐಸೋಲೇಷನ್ ಹಾಗೂ ಹೋಂ ಕ್ವಾರಂಟೈನ್‍ನಲ್ಲಿರುವವರು ಎಲ್ಲೆಂದರೆಲ್ಲೆ ಓಡಾಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಅಲ್ಲದೆ, ಅವರು ಪ್ರತ್ಯೇಕವಾಗಿರಲು ಸೌಲಭ್ಯಗಳು ಇಲ್ಲದಿರಬಹುದು. ಆದ್ದರಿಂದ ಹೋಂ ಐಸೋಲೇಷನ್ ಹಾಗೂ ಹೋ ಕ್ವಾರಂಟೈನ್‍ನಲ್ಲಿರುವವರನ್ನು ಪರೀಕ್ಷೆ ಮಾಡಿ ಕೋವಿಡ್ ಕೇರ್ ಸೆಂಟರ್‍ಗೆ ಸ್ಥಳಾಂತರಿಸಬೇಕು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಸೋಂಕಿತರ ಪೈಕಿ ಸೋಂಕಿನ ಲಕ್ಷಣ ಇಲ್ಲದವರು ಮತ್ತು ಆಮ್ಲಜನಕ ಅವಶ್ಯಕವಿಲ್ಲದವರನ್ನು ಕೋವಿಡ್ ಕೇರ್ ಸೆಂಟರ್‍ಗೆ ಸ್ಥಳಾಂತರಿಸಬೇಕು. ಕ್ವಾರಂಟೈನ್‍ನಲ್ಲಿದ್ದ ಸೋಂಕಿತರ ಮನೆಯವರನ್ನು ಕಡ್ಡಾಯವಾಗಿ ರ್ಯಾಪಿಡ್ ಟೆಸ್ಟ್‍ಗೆ ಒಳಪಡಿಸಬೇಕು ಎಂದು ನಿರ್ದೇಶಿಸಿದರು.

      ಸೋಂಕಿತರಿಗೆ ಸೋಂಕು ಎಲ್ಲಿಂದ ಬಂದಿದೆ ಎಂಬ ಮೂಲವನ್ನು ಪತ್ತೆ ಹಚ್ಚಬೇಕು. ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಗುರುತಿಸಿ ಅವರನ್ನು ಕೋವಿಡ್ ಟೆಸ್ಟ್‍ಗೊಳಪಡಿಸುವ ಪ್ರಮಾಣ ಹೆಚ್ಚಾಗಬೇಕು. ಈ ನಿಟ್ಟಿನಲ್ಲಿ ತಹಸೀಲ್ದಾರ್, ಆರೋಗ್ಯಾಧಿಕಾರಿಗಳು/ ವೈದ್ಯರು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ಪಂಚಾಯತ್ ರಾಜ್ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

      ಜಿಲ್ಲೆಯಲ್ಲಿ ಅಂಗನವಾಡಿ/ ಆಶಾ ಕಾರ್ಯಕರ್ತೆಯರನ್ನು ಬಳಸಿಕೊಂಡು ಮನೆ ಮನೆ ಸಮೀಕ್ಷೆ ನಡೆಸಿ, ಸೋಂಕಿನ ಲಕ್ಷಣ ಹೊಂದಿರುವವರ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ಒಂದು ವೇಳೆ ಸೋಂಕಿನ ಲಕ್ಷಣಗಳಿದ್ದರೆ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಒಂದು ವೇಳೆ ಆಶಾಕಾರ್ಯಕರ್ತೆಯರು ಕೆಲಸ ನಿರ್ವಹಿಸಲು ನಿರಾಕರಿಸಿದರೆ ಅಂತಹವರಿಗೆ ನೋಟಿಸ್ ನೀಡಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಡಿಎಚ್‍ಒ ನಾಗೇಂದ್ರಪ್ಪ ಅವರಿಗೆ ಸೂಚಿಸಿದರು.

       ಹಾಸಿಗೆಗಳು ಸಿಗದೆ ಸೋಂಕಿತರು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡದಂತಾಗಬಾರದು. ಜಿಲ್ಲೆಯಲ್ಲಿ ಲಭ್ಯವಿರುವ ಹಾಸಿಗೆಗಳು ಮತ್ತೆ ಐಸಿಯು, ವೆಂಟಿಲೇಟರ್ ಇವುಗಳ ಮಾಹಿತಿಯನ್ನು ಡಿಎಚ್‍ಒ ಹಾಗೂ ಡಿಎಸ್ ಅವರು ನಿರ್ವಹಿಸಿ, ಹಾಸಿಗೆ ಲಭ್ಯತೆ ಇರುವ ಕಡೆ ಸೋಂಕಿತರನ್ನು ದಾಖಲು ಮಾಡಬೇಕು. ಹಾಸಿಗೆ ಖಾಲಿಯಿರುವ ಕಡೆ ತಾವು ರೆಫರ್ ಮಾಡುವ ಸೋಂಕಿತರನ್ನು ಖಾಸಗಿ ಆಸ್ಪತ್ರೆಗಳು ನಿರಾಕರಿಸುವಂತಿಲ್ಲ. ಒಂದು ವೇಳೆ ನಿರಾಕರಿಸಿದರೆ ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

       ರೆಮಿಡಿಸಿಯರ್ ಮತ್ತು ಆಮ್ಲಜನಕವನ್ನು ಅಗತ್ಯಕ್ಕೆ ಅನುಗುಣವಾಗಿ ಪೂರೈಕೆ ಮಾಡಿ, ಕೊರತೆಯಾಗದಂತೆ ನಿರ್ವಹಣೆ ಮಾಡಬೇಕು. ಅಗತ್ಯವಿರುವ ಸೋಂಕಿತರಿಗೆ ಮಾರ್ಗಸೂಚಿಯಂತೆಯೇ ರೆಮಿಡಿಸಿಯರ್ ಹಾಗೂ ಆಮ್ಲಜನಕ ನೀಡಬೇಕು. ಖಾಸಗಿ ಕೋವಿಡ್ ಆಸ್ಪತ್ರೆಗಳಿಗೆ ನಿತ್ಯ ಭೇಟಿ ನೀಡಿ ರೆಮಿಡಿಸಿಯರ್ ಹಾಗೂ ಆಮ್ಲಜನಕವನ್ನು ಸರ್ಕಾರದ ಮಾರ್ಗಸೂಚಿಯಂತೆ ಸೋಂಕಿತರಿಗೆ ಬಳಕೆ ಮಾಡಲಾಗುತ್ತಿದೆಯೇ ಎಂಬುದನ್ನು ಪರಿಶೀಲನೆ ಮಾಡಬೇಕು. ರೆಮಿಡಿಸಿಯರ್ ಹಾಗೂ ಆಮ್ಲಜನಕದ ಅಗತ್ಯತೆಯ ಬಗ್ಗೆ ಪ್ರತಿನಿತ್ಯ ವರದಿ ಸಂಗ್ರಹಿಸಿ ನನಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ನೀಡಬೇಕು. ಸರ್ಕಾರ ನಿಗದಿ ಮಾಡಿರುವ ಬೆಲೆಗಿಂತ ಹೆಚ್ಚಿನ ಬೆಲೆಗೆ ರೆಮಿಡಿಸಿಯರ್ ಮಾರಾಟವಾಗದಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ ಹಾಗೂ ಜಿಲ್ಲಾ ಔಷಧ ನಿಯಂತ್ರಿಕ ಮಮತಾ ಅವರಿಗೆ ಹೇಳಿದರು.

      ನಿತ್ಯ 5-6 ಸಾವಿರ ಕೋವಿಡ್ ಪರೀಕ್ಷೆಗಳಾಗಬೇಕು. ಅಂದಿನ ವರದಿ ಅಂದೇ ಸಿಗುವಂತಾಗಬೇಕು. ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಪತ್ತೆ ಕಾರ್ಯ ಸಮರ್ಪಕವಾಗಿ ಆಗಲೇಬೇಕು. ಸೋಂಕು ಹರಡುವ ಚೈನ್ ಕತ್ತರಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದು ಸೂಚನೆ ನೀಡಿದರು.

      ಜಿಲ್ಲೆಯಲ್ಲಿರುವ ಪ್ರತಿ ತಾಲೂಕಿನ ಕೋವಿಡ್ ನಿರ್ವಹಣೆ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ಸೋಂಕಿತರ ಸಂಪರ್ಕಿತರ ಪತ್ತೆ ಹಚ್ಚುವ ಕಾರ್ಯ ಸಮರ್ಪಕವಾಗಿ ನಿರ್ವಹಿಸಬೇಕು. ಸೋಂಕಿನ ಪ್ರಮಾಣವನ್ನು ಕಡಿಮೆ ಮಾಡಲು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು. ಸೋಂಕಿತರ ಸೋಂಕಿನ ಮೂಲವನ್ನು ಪತ್ತೆ ಹಚ್ಚಬೇಕು. ಕೋವಿಡ್ ಕೇರ್ ಸೆಂಟರ್‍ಗಳನ್ನು ಆರಂಭಿಸಬೇಕು. ಅಧಿಕಾರಿಗಳು ಆಸ್ಪತ್ರೆಗಳಿಗೆ ಮತ್ತು ಹೋಂ ಐಸೋಲೇಷನ್‍ನಲ್ಲಿರುವ ಸೋಂಕಿತರ ಮನೆಗಳಿಗೆ ಭೇಟಿ ನೀಡಿ ಮಾರ್ಗಸೂಚಿಗಳನ್ನು ಸೋಂಕಿತರು ಪಾಲಿಸುತ್ತಿದ್ದಾರಾ ಎಂಬುದರ ಬಗ್ಗೆ ಪರಿಶೀಲನೆ ನಡೆಸಬೇಕು. ಗ್ರಾಮಗಳಲ್ಲಿ ಸೋಂಕು ಹರಡುವುದಕ್ಕೆ ಕಡಿವಾಣ ಹಾಕಲೇಬೇಕು. ಯಾವುದೇ ಕಾರಣಕ್ಕೂ ಗ್ರಾಮಕ್ಕೆ ಕೋವಿಡ್ ಸೋಂಕು ವ್ಯಾಪಕವಾಗಿ ಹರಡಬಾರದು ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ನಿರ್ದೇಶಿಸಿದರು.

(Visited 4 times, 1 visits today)