ತುಮಕೂರು :

      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ವತಿಯಿಂದ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆಯ ಅಂಗವಾಗಿ ತಿಪಟೂರಿನ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿಂದು ಗಾಂಧೀಜಿಯವರ ಜೀವನಚರಿತ್ರೆ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ತಿಪಟೂರು ತಾಲ್ಲೂಕು ಪಂಚಾಯತಿ ಸದಸ್ಯ ಜಿ.ಎಸ್. ಶಿವಸ್ವಾಮಿ ಅವರು ಚಾಲನೆ ನೀಡಿದರು.

      ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು ಕರ್ನಾಟಕದಲ್ಲಿ ಗಾಂಧೀಜಿಯವರ ಅಪರೂಪದ ಛಾಯಾಚಿತ್ರಗಳನ್ನು ಬಸ್ ನಿಲ್ದಾಣದಲ್ಲಿ ಪ್ರದರ್ಶನಗೊಂಡಿವೆ. ಗಾಂಧೀಜಿಯವರ ಜೀವನ ಮೌಲ್ಯಗಳು ಹಾಗೂ ಅವರ ಹೋರಾಟಗಳ ಅಪರೂಪದ ಛಾಯಾಚಿತ್ರ ವೀಕ್ಷಿಸುವ ಮೂಲಕ ಗಾಂಧೀಜಿಯವರ ಸ್ಮರಣೆ ಮಾಡಿಕೊಳ್ಳಬಹುದು ಎಂದರು.

      ಗಾಂಧೀಜಿ ಅವರ ಜೀವನ ಸಾಧನೆಗಳ ಅಪರೂಪದ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿದೆ. ಎಲ್ಲರಿಗೂ ಇದೊಂದು ಸದಾವಕಾಶವಾಗಿದೆ. ಸತ್ಯ ಅಹಿಂಸೆಯ ಮೂಲಕ ಸ್ವಾತಂತ್ರ್ಯ ಹೋರಾಟ ಹಾಗೂ ಅಪಾರ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ತೋರಿಸಿದ ಮಹಾತ್ಮ ಗಾಂಧೀಜಿ ಅವರ ಸ್ಮರಣೆ ಸದಾಕಾಲವೂ ನಮಗೆಲ್ಲ ಪ್ರೇರಣೆದಾಯಕವಾಗಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತಿ ಸದಸ್ಯ ರವಿಕುಮಾರ್, ಬಸ್ ನಿಲ್ದಾಣಾಧಿಕಾರಿ ರಂಗಸ್ವಾಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡಿ. ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು. ಪ್ರದರ್ಶನವು ಇಂದಿನಿಂದ ಡಿಸೆಂಬರ್ 1ರವರೆಗೆ ನಡೆಯಲಿದೆ.

      ಪ್ರದರ್ಶನಕ್ಕೆ ಮೆಚ್ಚುಗೆ:- ಸ್ವಾತಂತ್ರ್ಯ ಸಂಗ್ರಾಮದ ಕಾಲಘಟ್ಟಗಳಲ್ಲಿ ಮಹಾತ್ಮಾ ಗಾಂಧೀಜಿ ಅವರು ಕರ್ನಾಟಕಕ್ಕೆ ಭೇಟಿ ನೀಡಿದ ಪ್ರದೇಶಗಳು, ಅಸ್ಪøಶತೆ ನಿವಾರಣೆಗಾಗಿ ಗಾಂಧೀಜಿ ನಡೆಸಿದ ಆಂದೋಲನ, 1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೇಸ್ ಅಧಿವೇಶನ ಸೇರಿದಂತೆ ಅವರ ಜೀವನ ಚರಿತ್ರೆಯ ಅಪರೂಪದ ಛಾಯಾಚಿತ್ರಗಳನ್ನು ಪ್ರದರ್ಶನದಲ್ಲಿ ಇಡಲಾಗಿತ್ತು. ಈ ವಿಶೇಷ ಛಾಯಾಚಿತ್ರ ಪ್ರದರ್ಶನ ಕುರಿತಂತೆ ಅಭಿಪ್ರಾಯ ವ್ಯಕ್ತಪಡಿಸಿದ ಕೆಲ ವಿದ್ಯಾರ್ಥಿಗಳು ಛಾಯಾಚಿತ್ರ ಪ್ರದರ್ಶನವು ಗಾಂಧೀಜಿಯವರ ಜೀವನದ ಕೆಲವು ಮಹತ್ವದ ಕಾಲಘಟ್ಟವನ್ನು ಅರಿತುಕೊಳ್ಳಲು ಸಹಕಾರಿಯಾಯಿತು ಎಂದರು.

(Visited 13 times, 1 visits today)