ತುಮಕೂರು :
ಮಕ್ಕಳ ಸಾಧನೆಗೆ ಶಿಕ್ಷಣ ಮತ್ತು ಪೌಷ್ಠಿಕತೆ ಅತ್ಯಾವಶ್ಯಕವೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತುಮಕೂರು ನಗರ ಮತ್ತು ಗ್ರಾಮಾಂತರದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸಂಯುಕ್ತಾಶ್ರದಲ್ಲಿ ನಗರದ ಜಿಲ್ಲಾ ಬಾಲ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪೋಷಣ್ ಅಭಿಯಾನ್ ಯೋಜನೆಯ “ಪೋಷಣ್ ಪಕ್ವಾಡ್’’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಯಾವುದೇ ಮಗು ಮತ್ತು ತಾಯಿ ಮಾನಸಿಕವಾಗಿ, ದೈಹಿಕವಾಗಿ ಸದೃಢವಾಗಿರಬೇಕೆಂದರೆ ಪೌಷ್ಠಿಕ ಆಹಾರ ಬಹಳ ಮುಖ್ಯ. ಪೌಷ್ಠಿಕ ಆಹಾರದ ಕೊರತೆಯಿಂದ ಮಗುವಿನ ಬುದ್ಧಿ ಬೆಳವಣಿಗೆಯಲ್ಲಿ ಹಿನ್ನೆಡೆಯಾಗುವ ಸಾಧ್ಯತೆ ಇರುತ್ತದೆ. ಈ ನಿಟ್ಟಿನಲ್ಲಿ ಸರ್ಕಾರವು ತಾಯಿ ಹಾಗೂ ಮಗುವಿನಲ್ಲಿ ಪೌಷ್ಠಿಕತೆ ಹೆಚ್ಚಿಸಲು ಅಂಗನವಾಡಿಗಳ ಮೂಲಕ ಪೌಷ್ಠಿಕ ಆಹಾರವನ್ನು ವಿತರಿಸಲಾಗುತ್ತಿದೆ. ಹೆಚ್ಚಿನ ಸಂಖ್ಯೆಯ ಬಡ ತಾಯಂದಿರು ಮತ್ತು ಮಕ್ಕಳಿಗೆ ಈ ಯೋಜನೆಯು ವರದಾನವಾಗಿದೆ. ಪ್ರಧಾನ ಮಂತ್ರಿ ಮೋದಿಯವರು ರೂಪಿಸಿರುವ ಪೋಷಣ್ ಪಕ್ವಾಡ್ ಯೋಜನೆ ಉತ್ತಮ ಕಾರ್ಯಕ್ರಮವಾಗಿದ್ದು, ಪೌಷ್ಠಿಕತೆ ಮಹತ್ವದ ಬಗ್ಗೆ ಪೋಷಕರಿಗೆ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು.
ಕೋವಿಡ್-19 ಲಾಕ್ಡೌನ್ ಸಂದರ್ಭದಲ್ಲಿ ಅಂಗನವಾಡಿ/ಆಶಾ ಕಾರ್ಯಕರ್ತೆಯರು ಸೇನಾನಿಗಳಂತೆ ಸಲ್ಲಿಸಿದ ಸೇವೆಯನ್ನು ಶ್ಲಾಘಿಸಿದ ಅವರು ಅಂಗನವಾಡಿಗಳಲ್ಲಿ ಮಕ್ಕಳÀನ್ನು ತಮ್ಮ ಮಕ್ಕಳೆಂದು ಭಾವಿಸಿ ಪೋಷಣೆ ಮಾಡಿದಲ್ಲಿ ಮಕ್ಕಳು ಸದೃಢರಾಗಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುತ್ತಾರೆÉ ಎಂದರಲ್ಲದೆ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆಯಂತಹ ಯೋಚನೆಗಳನ್ನು ಕೈಬಿಟ್ಟು ಮಕ್ಕಳ ಭವಿಷ್ಯವನ್ನು ಉತ್ತಮವಾಗಿ ರೂಪಿಸುವ ನಿಟ್ಟಿನಲ್ಲಿ ಸೇವೆ ಸಲ್ಲಿಸಬೇಕೆಂದು ಕಿವಿಮಾತು ಹೇಳಿದರು.
ಪ್ರಾಸ್ತವಿಕವಾಗಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಸ್. ನಟರಾಜ್ ಮಾತನಾಡಿ ಪೋಷಣ್ ಪಕ್ವಾಡ್ ಅಭಿಯಾನವು ದೇಶದ್ಯಾಂತ 15 ದಿನಗಳ ಕಾಲ ನಡೆಯುವ ಕಾರ್ಯಕ್ರಮವಾಗಿದ್ದು, ಮಕ್ಕಳ/ಶಿಶುಗಳ ಮರಣ ಪ್ರಮಾಣವನ್ನು ಕಡಿಮೆ ಮಾಡುವ, ಗರ್ಭಿಣಿ ಮತ್ತು ಬಾಣಂತಿಯರಲ್ಲಿ ಕಂಡುಬರುವ ರಕ್ತ ಹೀನತೆ ಹೋಗಲಾಡಿಸಿ ತಾಯಂದಿರ ಸಾವಿನ ಪ್ರಮಾಣವನ್ನು ಕಡಿಮೆ ಮಾಡುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ನಾವು ಬದಲಾಗಿರುವ ಆಹಾರ ಪದ್ಧತಿಯನ್ನು ರೂಢಿಸಿಕೊಂಡು ಪಾರಂಪರಿಕ ಆಹಾರವನ್ನು ಸೇವಿಸದಿರುವುದು ಅಪೌಷ್ಠಿಕತೆಗೆ ಮತ್ತೊಂದು ಕಾರಣವಾಗಿದೆ. ಸ್ಥಳೀಯವಾಗಿ ದೊರೆಯುವ ಆಹಾರದಲ್ಲಿ ಉತ್ತಮ ಪೋಷಕಾಂಶಗಳಿರುವುದರಿಂದ ಪೋಷಕರು ತಮ್ಮ ಮಕ್ಕಳಿಗೆ ಪಾರಂಪರಿಕ ಆಹಾರವನ್ನೆ ನೀಡಬೇಕೆಂದರು.
“ಪೋಷಣ್ ಪಕ್ವಾಡ್” ಪ್ರಯುಕ್ತ ಪಾರಂಪರಿಕ ಆಹಾರ ಪದ್ಧತಿ ಕುರಿತು ಅರಿವು ಮೂಡಿಸುವ ಸಲುವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆವರಣದಲ್ಲಿ ತುಮಕೂರು ನಗರ ಮತ್ತು ಗ್ರಾಮಾಂತರ ವ್ಯಾಪ್ತಿಯ ವಿವಿಧ ಅಂಗನವಾಡಿ ಕಾರ್ಯಕರ್ತೆಯರಿಂದ ಸ್ಥಳೀಯವಾಗಿ ಸಿಗುವ ಆಹಾರ ಪದಾರ್ಥಗಳಿಂದ ವಿವಿಧ ರೀತಿಯ ಮೌಲ್ಯವರ್ಧಿತ ತಿನಿಸುಗಳನ್ನು ತಯಾರಿಸುವ ಪ್ರ್ರಾತ್ಯಕ್ಷಿಕೆಯನ್ನು ಏರ್ಪಡಿಸಲಾಗಿತ್ತು. ಮೌಲ್ಯವರ್ಧಿತ ಆಹಾರ ಸೇವನೆಯಿಂದ ಆರೋಗ್ಯದ ಮೇಲಾಗುವ ಪ್ರಯೋಜನಗಳ ಬಗ್ಗೆ ಜಿಲ್ಲಾ ಆಯುಷ್ ಆಧಿಕಾರಿ ಡಾ. ಹೆಚ್. ಸಂಜೀವ್ಮೂರ್ತಿ ಮಾಹಿತಿ ನೀಡಿದರು. ನಂತರ ಪತಂಜಲಿ ಯೋಗ ಶಿಕ್ಷಣ ಸಂಸ್ಥೆಯ ಯೋಗ ಗುರುಗಳಾದ ಬೊಮ್ಮಣ್ಣ, ಗೀತಕ್ಕ ಮತ್ತು ಲಲಿತಕ್ಕ ಅವರಿಂದ ಯೋಗಾಭ್ಯಾಸ ಪ್ರದರ್ಶನ ಏರ್ಪಡಿಸಲಾಗಿತ್ತು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಕುಮಾರಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಕಾರ್ಯಕ್ರಮ ನಿರೂಪಣಾಧಿಕಾರಿ ಶ್ರೀಧರ್, ಆರ್.ಎಂ. ದಿನೇಶ್, ಸಂಪನ್ಮೂಲ ವ್ಯಕ್ತಿಗಳಾದ ಮಹೇಶ್ ಸೇರಿದಂತೆ ವಿವಿಧ ತಾಲ್ಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಮಕ್ಕಳು ಮುಂತಾದವರು ಉಪಸ್ಥಿತರಿದ್ದರು. ್ನ ನಗರದ ಟೌನ್ಹಾಲ್ ಸರ್ಕಲ್ ಬಳಿ ಹಮ್ಮಿಕೊಂಡಿದ್ದ ಪೋಷಣ್ ಪಕ್ವಾಡ್ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಚಾಲನೆ ನೀಡಿದರು. ಈ ಜಾಥಾ ಕಾರ್ಯಕ್ರದಲ್ಲಿ ಅಂಗನವಾಡಿ ಕಾರ್ಯ ಕರ್ತೆಯರು, ಇಲಾಖಾ ಸಿಬ್ಬಂದಿಗಳು ಭಾಗವಹಿಸಿದ್ದರು.