ತುಮಕೂರು :

ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಏಪ್ರಿಲ್ 21ರಂದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ಸೇವೆಯಲ್ಲಿ ಅತ್ಯುನ್ನತ ಸೇವೆಗೈದ ಜಿಲ್ಲೆಯ ಸರ್ಕಾರಿ ಅಧಿಕಾರಿ/ನೌಕರರು ಸೇರಿದಂತೆ ಹತ್ತು ಮಂದಿಗೆ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯು 10ಸಾವಿರ ರೂ. ನಗದು ಪುರಸ್ಕಾರ ಹಾಗೂ ನೆನಪಿನ ಕಾಣಿಕೆಯನ್ನು ಒಳಗೊಂಡಿರುತ್ತದೆ. ಜಿಲ್ಲಾ ಮಟ್ಟದ ಪ್ರಶಸ್ತಿಗಾಗಿ ಎ ಮತ್ತು ಬಿ ಗ್ರೂಪಿನ ತಲಾ 2, ಸಿ ಹಾಗೂ ಡಿ ಗ್ರೂಪಿನ ತಲಾ 3 ಮಂದಿಯನ್ನು ಆಯ್ಕೆ ಮಾಡಲಾಗುವುದು. ಪ್ರಶಸ್ತಿ ಆಯ್ಕೆಯಲ್ಲಿ ಜಿಲ್ಲಾ ಮಟ್ಟದ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ತಿಳಿಸಿದರಲ್ಲದೆ, ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಜಿಲ್ಲೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಸರ್ಕಾರಿ ಅಧಿಕಾರಿ/ನೌಕರರ ಎರಡು ಹೆಸರುಗಳನ್ನು ರಾಜ್ಯ ಮಟ್ಟದ ಸಮಿತಿಗೆ ಶಿಫಾರಸ್ಸು ಮಾಡಲಾಗುವುದು ಎಂದು ತಿಳಿಸಿದರು.
ಸರ್ಕಾರದ ಕಾರ್ಯ ನಿರ್ವಹಣೆಯಲ್ಲಿ ಸುಧಾರಣೆ ತರುವ ಮೂಲಕ ಗುಣ ಮಟ್ಟದ ಸೇವೆ ಸೇರಿದಂತೆ ನಿಗಧಿಪಡಿಸಿರುವ ಮಾನದಂಡಗಳನ್ನು ಪರಿಗಣಿಸಿ ಆಯ್ಕೆ ಮಾಡಲಾಗುವುದು. ಪ್ರತ್ಯೇಕವಾಗಿ ಪ್ರಶಸ್ತಿ ಯೋಜನೆಯನ್ನು ಹೊಂದಿರುವ ಒಳಾಡಳಿತ, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಗಳ ಸಮವಸ್ತ್ರ ಅಧಿಕಾರಿ/ಸಿಬ್ಬಂದಿ ಹಾಗೂ ಶಿಕ್ಷಣ ಇಲಾಖೆ ಬೋಧಕ ಸಿಬ್ಬಂದಿಗಳನ್ನು ಹೊರತುಪಡಿಸಿ ಉಳಿದವರನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ ಮಾತನಾಡಿ ಆಸಕ್ತ ಸರ್ಕಾರಿ ಅಧಿಕಾರಿ/ನೌಕರರು ಏಪ್ರಿಲ್ 13ರೊಳಗಾಗಿ ಜಾಲತಾಣ ಮೂಲಕ ನಾಮ ನಿರ್ದೇಶನ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ತಿಳಿಸಿದರು.
ಶಿಷ್ಠಾಚಾರದಂತೆ ಸರ್ಕಾರಿ ನೌಕರರ ದಿನಾಚರಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಮುದ್ರಿಸುವ, ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಆಹ್ವಾನಿಸುವ, ತುಮಕೂರು ತಾಲ್ಲೂಕಿನ ಸರ್ಕಾರಿ ಅಧಿಕಾರಿ/ನೌಕರರಿಗೆ ಕಾರ್ಯಕ್ರಮಕ್ಕೆ ಹಾಜರಾಗಲು ಅನುವಾಗುವಂತೆ ಓಓಡಿ ಸೌಲಭ್ಯ ಕಲ್ಪಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಉಪವಿಭಾಗಾಧಿಕಾರಿ ವಿ. ಅಜಯ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಣ್ಣ ಮಸಿಯಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎನ್. ನರಸಿಂಹರಾಜು, ಪ್ರಧಾನ ಕಾರ್ಯದರ್ಶಿ ಟಿ. ಎನ್. ಜಗದೀಶ್, ರಾಜ್ಯ ಪರಿಷತ್ ಸದಸ್ಯ ಹೆಚ್.ಕೆ. ನರಸಿಂಹಮೂರ್ತಿ ಸೇರಿದಂತೆ ಮತ್ತಿತರರು ಹಾಜರಿದ್ದರು.

(Visited 25 times, 1 visits today)