ತುಮಕೂರು: ಇತ್ತೀಚಿನ ದಿನಗಳಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಡೇಟಾ ಸೈನ್ಸ್ ಕೋರ್ಸ್ಗೆ ಸಾಕಷ್ಟು ಬೇಡಿಕೆ ಹೆಚ್ಚಾಗುತ್ತಿದ್ದು, ತುಮಕೂರಿನಲ್ಲಿ ಮೊದಲ ಬಾರಿಗೆ ಬಿ.ಸಿ.ಎ. ಪದವಿಗೆ ಎಐಡಿಎಸ್ ಕೋರ್ಸ್ ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ ಮತ್ತು ಡೇಟಾ ಸೈನ್ಸ್ನಂತಹ “ಉದಯೋನ್ಮುಖ ಕ್ಷೇತ್ರಗಳಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಉತ್ತಮ ಅವಕಾಶಗಳನ್ನು ಒದಗಿಸಲಿದೆ” ಈ ಕೋರ್ಸ್ ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ತಂತ್ರಜ್ಞಾನಗಳ ಬಗ್ಗೆ ಸಮಗ್ರವಾದ ತಿಳುವಳಿಕೆಯನ್ನು ನೀಡಲಾಗುತ್ತಿದೆ ಮತ್ತು ಉದ್ಯಮದ ಅಗತ್ಯತೆಗಳಿಗೆ ತಕ್ಕಂತೆ ಅವರನ್ನು ಸಿದ್ಧಗೊಳಿಸುತ್ತದೆ ಎಂದು ವರದರಾಜ ಶಿಕ್ಷಣ ಸಂಸ್ಥೆಗಳ ನಿರ್ದೇಶಕರಾದ ಡಾ.ಮುಬಾರಕ್ರವರು ತಿಳಿಸಿದರು.
ನಗರದ ಶೆಟ್ಟಿಹಳ್ಳಿ ಹೊರವಲಯದ ಜಯನಗರ ದಕ್ಷಿಣದಲ್ಲಿರುವ ವರದರಾಜ ಚಾರಿಟಬಲ್ ಟ್ರಸ್ಟ್ನ ವತಿಯಿಂದ ವರದರಾಜ ಪದವಿ ಕಾಲೇಜಿನಲ್ಲಿ ಜೂನ್ ೪ ರಂದು ಬುಧವಾರ ಬೆಳಿಗ್ಗೆ ೧೧ ಗಂಟೆಗೆ ಕಾಲೇಜಿನ ಆವರಣದಲ್ಲಿ ಬಿ.ಸಿ.ಎ.ವಿದ್ಯಾರ್ಥಿಗಳಿಗೆ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಡೇಟಾ ಸೈನ್ ಕುರಿತು ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ್ದ ಡಾ.ಮುಬಾರಕ್ರವರು ಮಾತನಾಡುತ್ತಾ ವಿದ್ಯಾರ್ಥಿಗಳನ್ನು ಕ್ಯಾಂಪಸ್ ನೇಮಕಾತಿಗಳು ಮತ್ತು ಸ್ಪರ್ಧಾತ್ಮಕ ಮಾರುಕಟ್ಟೆಗೆ ಸಿದ್ಧಪಡಿಸುವ ನಿಟ್ಟಿನಲ್ಲಿ ಪ್ರಮುಖವಾಗಿ ಗಮನಹರಿಸಲಾಗಿತ್ತು.
ಕಾರ್ಯಕ್ರಮದಲ್ಲಿ ವರದರಾಜ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯಾದ ವರುಣ್ ಅಸ್ರಣ್ಣರವರು ಮಾತನಾಡುತ್ತಾ ಗುಣಮಟ್ಟದ ಶಿಕ್ಷಣದ ಜೊತೆ ಜೊತೆಯಲ್ಲಿಯೇ ಶಿಕ್ಷಣ ಮತ್ತು ಉದ್ಯೋಗಾವಕಾಶಗಳಿಗೆ ಹೆಚ್ಚಿನ ಒತ್ತು ನೀಡುತ್ತಾ ಬಂದಿದ್ದು, ಈ ಕಾರ್ಯಾಗಾರವು ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ ಮತ್ತು ಡೇಟಾ ಸೈನ್ಸ್ನ ಮೂಲಭೂತ ಅಂಶಗಳನ್ನು ಪರಿಚಯಿಸಲು ಮತ್ತು ಈ ಕ್ಷೇತ್ರಗಳಲ್ಲಿ ಲಭ್ಯವಿರುವ ವೃತ್ತಿ ಅವಕಾಶಗಳ ಬಗ್ಗೆ ತಿಳಿಸಲು ಸಹಕಾರಿಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಾಗಾರದಲ್ಲಿ ಎಐ ತಜ್ಞರಾದ ಪ್ರೊ.ಮೋಹನ್ಶಂಕರ್ರವರು ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ ಮತ್ತು ಡೇಟಾ ಸೈನ್ಸ್ನ ವಿವಿಧ ಆಯಾಮಗಳ ಬಗ್ಗೆ ಮಾಹಿತಿ ನೀಡಿದರು. ಈ ತಂತ್ರಜ್ಞಾನಗಳು ಹೇಗೆ ಕಾರ್ಯನಿರ್ವಹಿಸುತ್ತವೆ, ಅವುಗಳ ಅನ್ವಯಗಳು ಮತ್ತು ಭವಿಷ್ಯದಲ್ಲಿ ಈ ಕ್ಷೇತ್ರಗಳಲ್ಲಿನ ಬೆಳವಣಿಗೆಗಳ ಕುರಿತು ಅವರು ಸ್ವವಿವರವಾಗಿ ವಿವರಿಸಿದರು. ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಗಳಲ್ಲಿ ಹೇಗೆ ಸಿದ್ಧರಾಗಬೇಕು ಮತ್ತು ಸ್ಪರ್ಧಾತ್ಮಕ ಉದ್ಯೋಗ ಮಾರುಕಟ್ಟೆಯಲ್ಲಿ ಯಶಸ್ವಿಯಾಗಲು ಬೇಕಾದ ಕೌಶಲ್ಯಗಳ ಬಗ್ಗೆಯೂ ಅವರು ಮಾರ್ಗದರ್ಶನ ನೀಡಿದರು. ಈ ಕಾರ್ಯಾಗಾರವು ವಿದ್ಯಾರ್ಥಿಗಳಿಗೆ ತಾಂತ್ರಿಕ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಮತ್ತು ಭವಿಷ್ಯದ ಉದ್ಯೋಗಾವಕಾಶಗಳಿಗೆ ಸಿದ್ಧರಾಗಲು ಉತ್ತಮ ವೇದಿಕೆಯನ್ನು ಒದಗಿಸಿತು. ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಸಕ್ರಿಯವಾಗಿ ಭಾಗವಹಿಸಿ, ತಜ್ಞರೊಂದಿಗೆ ಸಂವಾದ ನಡೆಸಿದರು. ಕಾಲೇಜಿನ ಈ ಉಪಕ್ರಮವು ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಮಹತ್ವದ ಕೊಡುಗೆ ನೀಡಲಿದೆ ಎಂದರು.
ಈ ಸಂದರ್ಭದಲ್ಲಿ ಬಿ.ಸಿ.ಎ. ವಿಭಾಗದ ಮುಖ್ಯಸ್ಥರಾದ ಪ್ರೊ.ವಿದ್ಯಾರವರು ಉಪಸ್ಥಿತರಿದ್ದರು. ಕಾಲೇಜಿನ ಬೋಧಕ ವರ್ಗದವರು, ಸಿಬ್ಬಂದಿ ವರ್ಗ ಮತ್ತು ನೂರಾರು ಬಿ.ಸಿ.ಎ. ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.