
ತುಮಕೂರು: ತುಮಕೂರು ಮತ್ತಷ್ಟು ಅಭಿವೃದ್ಧಿ ಆಗಬೇಕಿರುವ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಮಾದರಿಯಲ್ಲಿ ಗ್ರೇಟರ್ ತುಮಕೂರು ಘೋಷಿಸಬೇಕೆಂಬ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ.ಪರಮೇಶ್ವರ ತಿಳಿಸಿದ್ದಾರೆ.
ತುಮಕೂರು ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಶುಕ್ರವಾರ ೩೦೦ ಹಾಸಿಗೆಗಳ ಜಿಲ್ಲಾಸ್ಪತ್ರೆ ನೂತನ ಕಟ್ಟಡದ ಶಂಕುಸ್ಥಾಪನೆ, ೧೦೦ ಹಾಸಿಗೆಗಳ ಕ್ಯಾನ್ಸರ್ ಆಸ್ಪತ್ರೆ, ೧೦೦ ಹಾಸಿಗೆಗಳುಳ್ಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ನರ್ಸಿಂಗ್ ಕಾಲೇಜು, ಹಾಸ್ಟಲ್ ಕಟ್ಟಡಗಳ ಲೋಕಾರ್ಪಣೆ ಹಾಗೂ ತುಮಕೂರು ತಾಲ್ಲೂಕಿನ ಭೀಮಸಂದ್ರ ಕೆರೆಯಿಂದ ವಸಂತನರಸಾಪುರ ಕೈಗಾರಿಕಾ ಪ್ರದೇಶಕ್ಕೆ ೩೦ ಎಂ.ಎಲ್.ಡಿ. ತೃತೀಯ ಹಂತದ ಸಂಸ್ಕರಿಸಿದ ನೀರು ಪೂರೈಕೆ ಯೋಜನೆ ಉದ್ಘಾಟನೆ ಸೇರಿದಂತೆ ವಿವಿಧ ೬೪೫ ಕೋಟಿ ರೂ. ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ ಅಡಿಗಲ್ಲು ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು.
ತುಮಕೂರು ಜಿಲ್ಲೆಯಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಕ್ರಮಗಳು ಆಗಬೇಕಿದೆ. ಆಗುತ್ತಿವೆ. ಅಂತೆಯೇ ತುಮಕೂರು ನಗರದ ಅಭಿವೃದ್ಧಿಯೂ ಪೂರಕವಾಗಿ ಆಗಬೇಕಿದೆ. ಈ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಮಾದರಿಯಲ್ಲಿ ಗ್ರೇಟರ್ ತುಮಕೂರು ಯೋಜನೆ ಪ್ರಸ್ತಾವವನ್ನು ಸರ್ಕಾರದ ಮುಂದೆ ಮಂಡಿಸಲಾಗುವುದು ಎಂದು ಅವರು ತಿಳಿಸಿದರು.
ತುಮಕೂರು ನಗರದಲ್ಲಿ ಬಹು ಕಾಲದಿಂದ ನಾಗರಿಕರಿಗೆ ನಿವೇಶನಗಳ ಹಂಚಿಕೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಮುಂದಿನ ೬ ತಿಂಗಳೊಳಗಾಗಿ ೨ ಸಾವಿರ ನಿವೇಶನಗಳನ್ನು ಹಂಚಲಾಗುವುದು ಎಂದು ತಿಳಿಸಿದ ಅವರು, ನೆನೆಗುದಿಗೆ ಬಿದ್ದಿರುವ ೨ನೇ ಹಂತದ ಒಳಚರಂಡಿ ಯೋಜನೆ ಕಾಮಗಾರಿಗಳು ಸೇರಿದಂತೆ ಹಲವಾರು ಅಭಿವೃದ್ಧಿ ಕಾಮಗಾರಿಗಳು ಶೀಘ್ರವೇ ಪೂರ್ಣಗೊಳ್ಳಲಿವೆ ಎಂದರು.
ತ್ಯಾಜ್ಯ ನಿರ್ವಹಣೆ ಬಹು ದೊಡ್ಡ ಸಮಸ್ಯೆ. ಈಗಾಗಲೇ ಬೆಂಗಳೂರು ವ್ಯಾಪ್ತಿಯಲ್ಲಿ ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಸಂಬAಧಿತ ಯೋಜನೆ ಪ್ರಸ್ತಾವ ಇಂಧನ ಸಚಿವರ ಮುಂದಿದೆ. ಅಂತೆಯೇ ತುಮಕೂರಿನಲ್ಲಿಯೂ ಕೂಡ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆಗೆ ಕ್ರಮವಹಿಸಲಾಗುವುದು ಎಂದರು.
ಹಿರೇಹಳ್ಳಿ-ಮಲ್ಲಸಂದ್ರ-ವಸAತನರಸಾಪುರ ಸಂಪರ್ಕಿಸುವ ಕೇಂದ್ರದ ರಸ್ತೆ ಯೋಜನೆಗೆ ನಮ್ಮ ಸಂಪೂರ್ಣ ಸಹಕಾರವಿದ್ದು, ತುಮಕೂರು ನಗರದ ಅಭಿವೃದ್ಧಿಯ ದೃಷ್ಟಿಯಿಂದ ಈ ಯೋಜನೆಗೆ ಪೂರಕವಾಗಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದರು.
ಅಭಿವೃದ್ಧಿ ಕುರಿತಂತೆ ಟೀಕೆಗಳು ನಗಣ್ಯ ಎಂದ ಅವರು, ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಿಂತಿಲ್ಲ. ಪ್ರತಿವರ್ಷ ೫೨ ಸಾವಿರ ಕೋಟಿ ರೂ. ಗ್ಯಾರಂಟಿ ಯೋಜನೆಗಳನ್ನು ನೀಡಿದಾಗ್ಯೂ ರಾಜ್ಯದಾದ್ಯಂತ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿರುವುದು ತಮ್ಮ ಕಣ್ಣ ಮುಂದಿದೆ. ತುಮಕೂರು ವಿಶ್ವವಿದ್ಯಾನಿಲಯದ ನೂತನ ಕ್ಯಾಂಪಸ್ ಉದ್ಘಾಟನೆ ಹೊರತುಪಡಿಸಿ ಇಂದು ಒಂದೇ ದಿನ ೬೪೫ ಕೋಟಿ ರೂ.ಗಳ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ನೆರವೇರಿಸಲಾಗಿದೆ ಎಂಬುದನ್ನು ಮನಗಾಣಬೇಕು ಎಂದರು.
ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ೧೭ ಬಾರಿ ಆಯ-ವ್ಯಯ ಮಂಡಿಸಿದ ಕೀರ್ತಿಗೆ ಭಾಜನರಾಗಿದ್ದಾರೆ. ಅವರಿಗೆ ಹಣಕಾಸಿನ ನಿರ್ವಹಣೆ ಸರಿಯಾಗಿ ಗೊತ್ತಿದೆ ಎಂದ ಅವರು, ರಾಜ್ಯದಲ್ಲಿ ಅಭಿವೃದ್ಧಿ ಎಂದಿಗೂ ನಿಲ್ಲುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ತುಮಕೂರು ವಿಶ್ವವಿದ್ಯಾಲಯ ವೇಗವಾಗಿ ಬೆಳೆಯುತ್ತಿದೆ, ೧೪ ಸಾವಿರ ಎಕರೆ ಪ್ರದೇಶದಲ್ಲಿ ಅಭಿವೃದ್ಧಿಯಾಗಿರುವ ವಸಂತನರಸಾಪುರ ಕೈಗಾರಿಕಾ ವಲಯದಲ್ಲಿ ೫ ಲಕ್ಷ ಜನರು ಉದ್ಯೋಗಿಗಳಾಗಲಿದ್ದಾರೆ. ಇದರ ಲಾಭವನ್ನು ತುಮಕೂರಿಗರು ಪಡೆದುಕೊಳ್ಳಬೇಕು ಎಂದರು.
ಮಾಜಿ ಸಚಿವ ಹಾಗೂ ಮಧುಗಿರಿ ಶಾಸಕ ಕೆ.ಎನ್. ರಾಜಣ್ಣ ಮಾತನಾಡಿ, ಗ್ರಾಮೀಣ ಬಡಜನರ ಬದುಕನ್ನು ಉತ್ತಮಪಡಿಸಲು ಬದ್ಧವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಂದಿಗೂ ಜನಪರ ಆಡಳಿತ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ: ಎಂ.ಸಿ. ಸುಧಾಕರ್, ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಶಾಸಕರಾದ ಜಿ.ಬಿ. ಜ್ಯೋತಿಗಣೇಶ್, ಬಿ. ಸುರೇಶ್ಗೌಡ, ಸಿ.ಬಿ. ಸುರೇಶ್ ಬಾಬು, ಹೆಚ್.ವಿ. ವೆಂಕಟೇಶ್, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ. ರೇವಣ್ಣ, ಜಿಲ್ಲಾಧ್ಯಕ್ಷ ಚಂದ್ರಶೇಖರ ಗೌಡ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದೀಪಾಚೋಳನ್, ಐಜಿಪಿ ಲಾಬೂರಾಮ್, ಕೆಎಸ್ಆರ್ಟಿಸಿ ನಿಗಮದ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ, ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಜಿಲ್ಲಾ ಆರೋಗ್ಯಾಧಿಕಾರಿ ಡಾ|| ಚಂದ್ರಶೇಖರ್, ಜಿಲ್ಲಾ ಶಸ್ತçಚಿಕಿತ್ಸಕ ಡಾ|| ಅಸ್ಗರ್ ಬೇಗ್ ಮತ್ತಿತರರು ಉಪಸ್ಥಿತರಿದ್ದರು.
ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ:
ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ೪೨.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ತುರ್ತು ತೀವ್ರ ನಿಗಾ ಘಟಕ, ೨೨.೨೮ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ೧೦೦ ಹಾಸಿಗೆಗಳುಳ್ಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ೬೯.೯೬ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ೧೦೦ ಹಾಸಿಗೆಯ ಕ್ಯಾನ್ಸರ್ ಆಸ್ಪತ್ರೆ, ೨೨ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ನರ್ಸಿಂಗ್ ಕಾಲೇಜು, ಹಾಸ್ಟಲ್ ಕಟ್ಟಡಗಳ ಲೋಕಾರ್ಪಣೆ ಹಾಗೂ ೧೩೧ ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗುವ ೩೦೦ ಹಾಸಿಗೆಗಳ ಜಿಲ್ಲಾಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿ, ೨೯.೪೯ ಕೋಟಿ ರೂ. ವೆಚ್ಚದ ೨೫ ಎಂ.ಎಲ್.ಡಿ. ಸಾಮರ್ಥ್ಯದ ಎಸ್.ಟಿ.ಪಿ. ಘಟಕಕ್ಕೆ ಚಾಲನೆ ಹಾಗೂ ೫೦ ಕೋಟಿ ರೂ. ವೆಚ್ಚದ ಒಳಚರಂಡಿ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಮತ್ತು ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ ೧೬೯ ಕೋಟಿ ರೂ. ವೆಚ್ಚದ ೨ನೇ ಹಂತದ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಲಾಯಿತು.
ಜಿಲ್ಲಾಡಳಿತ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಆಯೋಜಿಸಿರುವ ೧೩೦ ಕೋಟಿ ರೂ. ವೆಚ್ಚದ ತುಮಕೂರು ತಾಲ್ಲೂಕಿನ ಭೀಮಸಂದ್ರ ಕೆರೆಯಿಂದ ವಸಂತನರಸಾಪುರ ಕೈಗಾರಿಕಾ ಪ್ರದೇಶಕ್ಕೆ ೩೦ ಎಂ.ಎಲ್.ಡಿ. ತೃತೀಯ ಹಂತದ ಸಂಸ್ಕರಿಸಿದ ನೀರು ಪೂರೈಕೆ ಯೋಜನೆ ಉದ್ಘಾಟಿಸಲಾಯಿತು.



