ತುಮಕೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಂಪಿಕ್ ಸಂಸ್ಥೆಯ ಸಹಯೋಗದಲ್ಲಿ ಜನವರಿ ೧೬ ರಿಂದ ೨೨ರವರೆಗೆ ತುಮಕೂರಿನಲ್ಲಿ ನಡೆಯಲಿರುವ ಕರ್ನಾಟಕ ಕ್ರೀಡಾಕೂಟವನ್ನು ಯಶಸ್ವಿಗೊಳಿಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಹೇಳಿದರು.
ನಗರದ ಕಂಠೀರವ ಕ್ರೀಡಾಂಗಣದ ಒಲಂಪಿಕ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಕರ್ನಾಟಕ ಕ್ರೀಡಾಕೂಟ ೨೦೨೫-೨೬’ರ ಲಾಂಛನ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ತುಮಕೂರು ನಗರದಲ್ಲಿ ಸ್ಮಾರ್ಟ್ಸಿಟಿ ಯೋಜನೆಯಡಿ ಕಂಠೀರವ ಸ್ಟೇಡಿಯಂ ಮಾದರಿಯಲ್ಲಿ ೭೦ ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲಾಗಿದೆ. ಸಿಂಥೆಟಿಕ್ ಟ್ರ‍್ಯಾಕ್, ಕ್ರೀಡಾಪಟುಗಳಿಗೆ ವಸತಿ ವ್ಯವಸ್ಥೆ ಇದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳನ್ನು ನಡೆಸುವ ಸಾಮಾರ್ಥ್ಯವಿದೆ ಎಂದು ಹೇಳಿದರು.
ತುಮಕೂರಿನಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ೨೭ ಕ್ರೀಡೆಗಳನ್ನು ಆಯೋಜನೆ ಮಾಡಲಾಗಿದೆ. ನಾಲ್ಕು ಕ್ರೀಡೆಗಳನ್ನು ಮಾತ್ರ ಬೆಂಗಳೂರಿನಲ್ಲಿ ನಡೆಸಲಾಗುವುದು. ಒಲಂಪಿಕ್ ಮಟ್ಟದ ಕ್ರೀಡಾಕೂಟ ನಡೆಯಲಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ, ಯುವಕರಿಗೆ ಉತ್ತಮ ಅವಕಾಶ ಸಿಗಲಿದೆ. ಕಳೆದ ವರ್ಷ ಮಂಗಳೂರಿನಲ್ಲಿ ಯಶಸ್ವಿಯಾಗಿ ನಡೆದಿತ್ತು. ಈ ಬಾರಿ ತುಮಕೂರಿನಲ್ಲಿ ನಡೆಯುವ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಲಾಗುವುದು ಎಂದು ತಿಳಿಸಿದರು.
ತುಮಕೂರು ಜಿಲ್ಲೆಯಲ್ಲಿ ಕೃಷ್ಣಮೃಗ ಜಿಂಕೆ ಹೆಸರುವಾಸಿಯಾಗಿದೆ. ಈ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ನಡೆಯುವ ಕರ್ನಾಟಕ ಕ್ರೀಡಾಕೂಟಕ್ಕೆ ಕೃಷ್ಣಮೃಗ ಜಿಂಕೆಯನ್ನು ಲಾಂಛನಕ್ಕೆ ಬಳಸಲಾಗಿದೆ. ಇದು ಕ್ರೀಡಾಕೂಟದ ಮೊದಲ ಹೆಜ್ಜೆಯಾಗಿದ್ದು, ಯಶಸ್ವಿಗೊಳಿಸಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತೇವೆ.
ಈ ಹಿಂದೆ ದಸರಾ ಕ್ರೀಡಾಕೂಟದಲ್ಲಿ ಎಲ್ಲ ಕ್ರೀಡೆಗಳನ್ನು ನಡೆಸಲಾಗುತಿತ್ತು. ಇದನ್ನು ಹೊರತುಪಡಿಸಿದರೆ ಕ್ರೀಡಾಪಟುಗಳಿಗೆ ಬೇರೆ ಅವಕಾಶಗಳು ಸಿಗುತ್ತಿರಲಿಲ್ಲ. ಗೋವಿಂದರಾಜ್ ಅವರು ಕರ್ನಾಟಕ ಒಲಂಪಿಕ್ ಸಂಸ್ಥೆಯ ಅಧ್ಯಕ್ಷರಾದ ಬಳಿಕ, ಕಳೆದ ೨೫ ವರ್ಷಗಳಿಂದ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಕೆಲಸ ಮಾಡುತ್ತಿದ್ದಾರೆ.
ಕಬ್ಬಡ್ಡಿ, ಖೋಖೋ, ಹಾಕಿ ಕ್ರೀಡೆ ಸೇರಿದಂತೆ ವಿವಿಧ ಕ್ರೀಡಾ ಸಂಸ್ಥೆಗಳಿಗೆ ತಲಾ ೫೦ ಲಕ್ಷ ರೂ. ಮೊತ್ತದ ಅನುದಾನ ನೀಡಿದ್ದಾರೆ. ದೇಶದಲ್ಲಿ ಯಾವ ರಾಜ್ಯಗಳು ಕೂಡ ಈ ರೀತಿಯ ಕೆಲಸವನ್ನು ಮಾಡಿಲ್ಲ. ಕ್ರೀಡಾಪಟುಗಳಲ್ಲಿ ಕ್ರೀಡಾಸ್ಪೂರ್ತಿ ಬರಬೇಕಾದರೆ, ಕ್ರೀಡಾಕೂಟಗಳು ಹೆಚ್ಚಾಗಿ ನಡೆಯಬೇಕು ಮತ್ತು ಅದರಲ್ಲಿ ಭಾಗವಹಿಸುತ್ತಿರಬೇಕು. ಇದರಿಂದ ಕ್ರೀಡಾಪಟುಗಳಿಗೆ ತಮ್ಮ ಸಾಮಾರ್ಥ್ಯ ಏನಿದೆ ಎಂಬುದು ಗೊತ್ತಾಗುತ್ತದೆ. ಮುಂದಿನ ಕ್ರೀಡಾಕೂಟಗಳಿಗೆ ಹೆಚ್ಚಿನ ರೀತಿಯಲ್ಲಿ ಶ್ರಮವಹಿಸಲು ಸಾಧ್ಯವಾಗುತ್ತದೆ ಎಂದರು.
ಗೋವಿ0ದರಾಜ ಅವರು ತುಮಕೂರಿನಲ್ಲಿ ಕರ್ನಾಟಕ ಕ್ರೀಡಾಕೂಟ ನಡೆಸಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ತುಮಕೂರು ದಸರಾ ಯಶಸ್ವಿಯಾಗಿ ನಡೆಸಿದ್ದು, ಕರ್ನಾಟಕ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಲಾಗುವುದು. ಟೆನ್ನಿಸ್, ಬಾಸ್ಕೆಟ್‌ಬಾಲ್, ಕಬ್ಬಡ್ಡಿ ಸೇರಿದಂತೆ ಎಲ್ಲ ಕ್ರೀಡೆಗಳನ್ನು ನಡೆಸಲು ಸುಸಜ್ಜಿತ ವ್ಯವಸ್ಥೆ ಇದೆ ಎಂದು ತಿಳಿಸಿದರು.
ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಟಿ.ಬಿ.ಜಯಚಂದ್ರ, ಪಾವಗಡ ಶಾಸಕ ಹೆಚ್.ವಿ.ವೆಂಕಟೇಶ್, ಕರ್ನಾಟಕ ಒಲಂಪಿಕ್ ಸಂಸ್ಥೆಯ ಅಧ್ಯಕ್ಷ ಡಾ. ಕೆ.ಗೋವಿಂದರಾಜ್, ಪ್ರಧಾನ ಕಾರ್ಯದರ್ಶಿ ಟಿ.ಅನಂತರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾದ ಚೇತನ್.ಆರ್, ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಭು.ಜಿ, ಇದ್ದರು.

 

(Visited 1 times, 1 visits today)