
ತುಮಕೂರು: ರಾಜ್ಯದಾದ್ಯಂತ ಸರ್ಕಾರಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ ಗುತ್ತಿಗೆ ನೌಕರರಿಗೆ ನೀಡುತ್ತಿರುವ ವೇತನ ಸಾಕಾಗುತ್ತಿಲ್ಲ. ಹಾಗಾಗಿ ಅಂಬೇಡ್ಕರ್ ಅಭಿವೃದ್ದಿ ನಿಗಮದಲ್ಲಿ ಹೆಚ್ಚಳ ಮಾಡಿರುವಂತೆ ಎಲ್ಲಾ ಇಲಾಖೆಗಳಲ್ಲೂ ಸರ್ಕಾರಿ ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ನೀಡಬೇಕು ಎಂದು ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಸುಧಾಕರ್ ಒತ್ತಾಯಿಸಿದರು.
ನಗರದ ಖಾಸಗಿ ಹೋಟೆಲ್ನಲ್ಲಿ ಸಂಘದ ತುಮಕೂರು ಜಿಲ್ಲಾ ಘಟಕ ಉದ್ಘಾಟನೆ ಸಂಬ0ಧ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರಿ ಇಲಾಖೆಗಳಲ್ಲಿ ಹೊರ ಗುತ್ತಿಗೆ ನೌಕರರ ನೀಡುತ್ತಿರುವ ವೇತನ ಸಾಕಾಗುತ್ತಿಲ್ಲ. ಇದನ್ನು ಮನಗಂಡು ಈಗಾಗಲೇ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಹೊರ ಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಮಾಡಿಸಲಾಗಿದೆ. ಇನ್ನೆರಡು ದಿನದಲ್ಲಿ ಈ ಆದೇಶ ಹೊರ ಬೀಳಲಿದ್ದು, ಎಲ್ಲಾ ಸರ್ಕಾರಿ ಇಲಾಖೆಗಳಿಗೂ ಈ ಆದೇಶ ಪತ್ರ ನೀಡಿ ಹೊರ ಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ನೀಡಬೇಕು ಎಂದು ಮನವಿ ಮಾಡಲಾಗುವುದು ಎಂದರು.
ಸರ್ಕಾರ ಸುಮಾರು ಇಲಾಖೆಗಳಲ್ಲಿ ಈಗಾಗಲೇ ಕೆಲಸ ಮಾಡುತ್ತಿ ರುವ ಹೊರ ಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆಯುವ ಕಾರ್ಯ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಸಹಕಾರ ಸಂಘ ರಚನೆ ಮಾಡುವ ಸಂದರ್ಭದಲ್ಲೂ ಈಗ ಕಾರ್ಯನಿರ್ವಹಿಸುತ್ತಿರುವ ಹೊರ ಗುತ್ತಿಗೆ ನೌಕರರನ್ನು ಮುಂದುವರೆಸಬೇಕು ಎಂದು ಆಗ್ರಹಿ ಸಿದರು.
ಸಹಕಾರ ಸಂಘದ ನಡವಳಿಗಳು ಹೊರ ಗುತ್ತಿಗೆ ನೌಕರರಿಗೆ ಧಕ್ಕೆಯಾಗುತ್ತಿದೆ. ಇದರ ನಡವಳಿಗಳಲ್ಲಿ ೧೧ ತಿಂಗಳು ಕೆಲಸ ಕೊಟ್ಟರೆ ಮತ್ತೆ ಅವರಿಗೆ ಕೆಲಸ ಕೊಡುವುದಿಲ್ಲ ಎಂದು ಹೇಳಲಾಗಿದೆ. ಹಾಗಾಗಿ ಈ ನಡವಳಿಯನ್ನು ನಾವು ಸಂಪೂರ್ಣವಾಗಿ ತಿರಸ್ಕಾರ ಮಾಡಿದ್ದೇವೆ. ನಡವಳಿ ನೌಕರರ ಪರವಾಗಿರಬೇಕು. ಒಂದು ಬಾರಿ ಕೆಲಸ ಮಾಡಿದರೆ ಆ ನೌಕರರು ನಿವೃತ್ತಿಯಾಗುವವರೆಗೂ ಅದೇ ಇಲಾಖೆಯಲ್ಲೇ ಕೆಲಸ ಮಾಡಬೇಕು ಎಂದರು.
ಈಗಾಗಲೇ ಕಳೆದ ೧೦-೨೦ ವರ್ಷಗಳಿಂದ ಕೆಲಸ ಮಾಡುತ್ತಿರುವ ನೌಕರರನ್ನು ಅಲ್ಲೇ ಮುಂದುವರೆಸಬೇಕು ಎಂಬುದು ನಮ್ಮ ಬೇಡಿಕೆ. ಯಾವುದೇ ಕಾರಣಕ್ಕೂ ೬೦ ವರ್ಷದವರೆಗೂ ಆ ನೌಕರರನ್ನು ಕೆಲಸದಿಂದ ತೆಗೆಯಬಾರದು ಎಂದು ಅವರು ಒತ್ತಾಯಿಸಿದರು.
ಕೆಲ ಸರ್ಕಾರಿ ಇಲಾಖೆಗಳಲ್ಲಿ ನಿವೃತ್ತ ನೌಕರರನ್ನೆ ಹೊರ ಗುತ್ತಿದೆ ಆಧಾರದ ಮೇಲೆ ಮತ್ತೆ ನೇಮಕ ಮಾಡಿಕೊಂಡಿದ್ದಾರೆ. ಇದು ಸರಿಯಲ್ಲ. ಕೂಡಲೇ ನಿವೃತ್ತ ನೌಕರರ ಮರು ನೇಮಕಾತಿಯನ್ನು ಕೈ ಬಿಡಬೇಕು. ಇದನ್ನು ವಿರೋಧಿಸಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಮರುಗೇಶ ಟಿ.ಸಿ. ಮಾತನಾಡಿ, ಸರ್ಕಾರಿ ಹೊರ ಗುತ್ತಿಗೆ ನೌಕರರ ಸಂಘದ ಸದಸ್ಯರಿಗೆ ೧ ಲಕ್ಷ ರೂ. ಅಪಘಾತ ವಿಮೆ ನೀಡಬೇಕು. ಸಂಘದ ಪ್ರತಿ ಸದಸ್ಯರಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಈಗಾಗಲೇ ರಾಜ್ಯಾದ್ಯಂತ ಸಂಘಟನೆ ಮಾಡಲಾಗತ್ತಿದೆ ಎಂದರು.
ಪ್ರಸ್ತುತ ರಾಜ್ಯ ಸರ್ಕಾರ ರಾಜ್ಯಾದ್ಯಂತ ಕೈಗೊಂಡಿರುವ ಬೀದರ್ ಮಾದರಿ ಸಹಕಾರ ಸಂಘದ ರಚನೆ ಕುರಿತು ಸಂಪುಟ ಉಪ ಸಮಿತಿ ಕೈಗೊಂಡಿರುವ ವರದಿಯಲ್ಲಿ ಕೆಲವು ಶಿಫಾರಸ್ಸುಗಳನ್ನು ಬದಲಾಯಿಸಿ ನೌಕರರ ಹಿತ ಕಾಯುವ ನಿಟ್ಟಿನಲ್ಲಿ ಹಾಲಿ ಕೆಲಸ ಮಾಡುವ ನೌಕರರನ್ನು ಸಂಘದ ಅಡಿಯಲ್ಲಿ ಮುಂದುವರಿಸಬೇಕು ಹಾಗೂ ನೌಕರರು ಅವರ ೬೦ ವರ್ಷ ವಯಸ್ಸಿನವರೆಗೂ ಸದರಿ ಸ್ಥಳದಲ್ಲೇ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು.
ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘಟಿತರಾಗುವ ಮೂಲಕ ತಮ್ಮ ಬೇಡಿಕೆ ಈಡೇರಿಕೆಗೆ ಹಾಗೂ ಸಮಸ್ಯೆ ನಿವಾರಣೆಗೆ ಶ್ರಮಿಸಬೇಕು. ನೌಕರರ ಜತೆ ಸಂಘ ಸದಾ ಇರುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಸರ್ಕಾರಿ ಹೊರಗುತ್ತಿಗೆ ನೌಕರರ ಇಎಸ್ಐ, ಪಿಎಫ್, ಭದ್ರತೆ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಕುರಿತು ಮಾಹಿತಿ ಪಡೆದು, ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾ ಧ್ಯಕ್ಷ ಸುಧಾಕರ್, ಪ್ರಧಾನ ಕಾರ್ಯದರ್ಶಿ ಡಮರುಗೇಶ್, ರಾಜ್ಯ ವಕ್ತಾರ ಸುನೀಲ್, ರಾಜ್ಯ ಸಂಚಾಲಕ ಗಂಗಾಧರ್ ಮತ್ತಿತರರು ಪಾಲ್ಗೊಂಡಿದ್ದರು.





