ತುಮಕೂರು: ಸಾರ್ವಜನಿಕ ಉದ್ಯಮವಾದ ಕರ್ನಾಟಕ ವಿದ್ಯುತ್ ವಿತರಣಾ ಸಂಸ್ಥೆಯಾದ ಕೆಪಿಟಿಸಿಎಲ್ ಮತ್ತು ಬೆಸ್ಕಾಂ, ಎಸ್ಕಾಂಗೆ ಸಂಬAಧಿಸಿದ ವಿದ್ಯುತ್ ವಿತರಣಾ ಪರವಾನಗಿಯನ್ನು ಟಾಟಾ ಪವರ್ ಕಂಪೆನಿಗೆ ನೀಡಬಾರದು ಎಂದು ಆಗ್ರಹಿಸಿ ನಗರದ ಕೋತಿತೋಪಿನಲ್ಲಿರುವ ಬೆಸ್ಕಾಂ ಕಚೇರಿ ಮುಂಭಾಗ ಅಧಿಕಾರಿಗಳು ಮತ್ತು ನೌಕರರು ಪ್ರತಿಭಟನೆ ನಡೆಸಿದರು.
ಬೆಸ್ಕಾಂ ಕಚೇರಿ ಮುಂಭಾಗ ಅಧೀಕ್ಷಕ ಇಂಜಿನಿಯರ್ ನರಸಿಂಹಮೂರ್ತಿ ಹಾಗೂ ಕೆಪಿಟಿಸಿಎಲ್ ಅಧೀಕ್ಷಕ ಇಂಜಿನಿಯರ್ ಶಿವಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕುಗಳ ಬೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿ ಜಮಾಯಿಸಿ ಕೆಪಿಟಿಸಿಎಲ್ ಮತ್ತು ಬೆಸ್ಕಾಂ ಸೇರಿದಂತೆ ಎಲ್ಲಾ ಎಸ್ಕಾಂಗಳನ್ನು ಉಳಿಸಿ-ನಮ್ಮ ಹಕ್ಕನ್ನು ರಕ್ಷಿಸಿ ಎಂಬ ಕರಪತ್ರಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಅಧೀಕ್ಷಕ ಇಂಜಿನಿಯರ್ ನರಸಿಂಹಮೂರ್ತಿ ಮಾತನಾಡಿ, ಸರ್ಕಾರಿ ಸ್ವಾಮ್ಯದ ಬೆಸ್ಕಾಂ ಇಲಾಖೆ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಾ ಬಂದಿದೆ. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿರುವುದು ಆತಂಕ ಮೂಡಿಸಿದೆ. ಖಾಸಗಿ ಕಂಪೆನಿಯಾದ ಟಾಟಾ ಪವರ್ ಕಂಪೆನಿಗೆ ವಿದ್ಯುತ್ ವಿತರಣಾ ಪರವಾನಗಿ ನೀಡಿದರೆ ಗ್ರಾಹಕರು, ರೈತರಿಗೆ ತುಂಬಾ ತೊಂದರೆಯಾಗಲಿದೆ. ಜತೆಗೆ ನೌಕರರ ಸೇವಾ ಭದ್ರತೆಗೂ ಧಕ್ಕೆ ಉಂಟಾಗಲಿದೆ ಎಂದರು.
ವಿದ್ಯುತ್ ಕ್ಷೇತ್ರ ಖಾಸಗೀಕರಣದಿಂದ ಹಲವಾರು ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಇದು ರೈತ ವಿರೋಧಿ ಹಾಗೂ ಜನ ವಿರೋಧಿಯಾಗಿದ್ದು, ಸರ್ಕಾರ ಕೂಡಲೇ ಈ ಚಿಂತನೆಯನ್ನು ಕೈ ಬಿಡಬೇಕು ಎಂದು ಅವರು ಆಗ್ರಹಿಸಿದರು.
ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಗಿಯನ್ನು ಟಾಟಾ ಕಂಪೆನಿಗೆ ನೀಡುತ್ತಿರುವುದನ್ನು ಬೆಸ್ಕಾಂ ನೌಕರರ ಒಕ್ಕೂಟ, ರೈತರು, ಗ್ರಾಹಕರು ಹಾಗೂ ಗುತ್ತಿಗೆದಾರರು ಎಲ್ಲರೂ ಸೇರಿ ವಿರೋಧ ಮಾಡಬೇಕು. ಖಾಸಗೀಕರಣದಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಗ್ರಾಹಕರಿಗೆ ಮನದಟ್ಟು ಮಾಡಬೇಕು ಎಂದರು.
ಗ್ರಾಹಕರೇ ನಮ್ಮ ದೇವರು. ಗ್ರಾಹಕರಿಗೆ ಸೇವೆ ಸಲ್ಲಿಸುವುದು ನಮ್ಮ ಮುಖ್ಯ ಕರ್ತವ್ಯ ಎಂದ ಅವರು, ಈ ಹಿಂದೆ ವಿದ್ಯುತ್ ಉತ್ಪಾದನೆ ಮಾಡಲು ಹಾಗೂ ಬೆಟ್ಟಗುಡ್ಡಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲು ಯಾವ ಖಾಸಗಿ ಕಂಪೆನಿಗಳು ಮುಂದೆ ಬಂದಿರಲಿಲ್ಲ. ಆ ಕೆಲಸವನ್ನು ನಮ್ಮ ಇಲಾಖೆಯೇ ಮಾಡಿತು. ಆದರೂ ಸಹ ಈಗ ಖಾಸಗೀಕರಣ ಮಾಡುತ್ತಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಈಗಾಗಲೇ ರಿಲೆಯನ್ಸ್ನವರು ಉತ್ತಮವಾಗಿ ಕೆಲಸ ಮಾಡುತ್ತಿದ್ದ ಬಿಎಸ್‌ಎನ್‌ಎಲ್‌ನ್ನು ಮೂಲೆ ಗುಂಪು ಮಾಡಿ ಸಿಮ್ ಕಾರ್ಡ್ಗಳನ್ನು ಉಚಿತವಾಗಿ ಕೊಟ್ಟು ನಂತರ ಬೆಲೆ ನಿಗದಿ ಮಾಡಿ ಹಣ ವಸೂಲಿ ಮಾಡುತ್ತಿರುವುದನ್ನು ನಾವೆಲ್ಲಾ ನೋಡುತ್ತಿದ್ದೇವೆ. ಅದೇ ಮಾದರಿಯಲ್ಲಿ ಈಗ ವಿದ್ಯುತ್ ಇಲಾಖೆಯನ್ನು ಮೂಲೆ ಗುಂಪು ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದರು.
ಪ್ರಸ್ತುತ ರಾಜ್ಯ ಸರ್ಕಾರ ಗೃಹಜ್ಯೋತಿ ಯೋಜನೆಯಡಿ ಎಲ್ಲ ಮನೆಗಳಿಗೆ ಉಚಿತ ವಿದ್ಯುತ್ ನೀಡಿದೆ. ಯಾವುದೇ ಆದಾಯ ಇಲ್ಲದಿದ್ದರೆ ನಮ್ಮ ಇಲಾಖೆ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಹೇಳಿದರು.
ಸರ್ಕಾರದಿಂದ ಸಬ್ಸಿಡಿ ಬಂದರಷ್ಟೇ ಖಾಸಗಿ ಕಂಪೆನಿಗಳು ರೈತರಿಗೆ ವಿದ್ಯುತ್ ಸಂಪರ್ಕ ನೀಡುತ್ತವೆ. ಇಲ್ಲದಿದ್ದರೆ ವಿದ್ಯುತ್ ಸಂಪರ್ಕವನ್ನೇ ಕಡಿತ ಮಾಡುತ್ತವೆ. ಇದರಿಂದ ರೈತರು ಹಾಗೂ ಗ್ರಾಹಕರಿಗೆ ತುಂಬಾ ತೊಂದರೆಯಾಗುತ್ತದೆ. ಜತೆಗೆ ನಮ್ಮ ಅಧಿಕಾರಿಗಳು, ನೌಕರರ ಹುದ್ದೆಗಳಿಗೆ ಕತ್ತರಿ ಬೀಳುತ್ತದೆ. ಆದ್ದರಿಂದ ಗ್ರಾಹಕರು, ರೈತರು, ಸಂಘ ಸಂಸ್ಥೆಗಳು ಎಲ್ಲರೂ ಜತೆಗೂಡಿ ಹೋರಾಟ ನಡೆಸುವ ಮೂಲಕ ವಿದ್ಯುತ್ ಕ್ಷೇತ್ರ ಖಾಸಗೀಕರಣಕ್ಕೆ ಅವಕಾಶ ನೀಡಬಾರದು ಎಂದರು.
ಕೆಪಿಟಿಎಲ್ ಅಧೀಕ್ಷಕ ಇಂಜಿನಿಯರ್ ಶಿವಕುಮಾರ್ ಮಾತನಾಡಿ, ವಿದ್ಯುತ್ ಕಂಪನಿ ಖಾಸಗೀಕರಣಗೊಂಡರೆ ಉದ್ಯೋಗ ಭದ್ರತೆ ಇಲ್ಲದಂತಾಗಿ ನೌಕರರು ಹಾಗೂ ಅವರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಲಿವೆ. ಖಾಸಗಿ ಕಂಪೆನಿಗಳು ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನೀಡಿ, ಕೆಲಸಕ್ಕೆ ತಕ್ಕಷ್ಟು ಮಾತ್ರ ಸಂಬಳ ನೀಡುವುದರಿಂದ ನೌಕರರು ಹಲವಾರು ಸಮಸ್ಯೆಗಳಿಗೆ ಗುರಿಯಾಗುತ್ತಾರೆ ಎಂದರು.
ಇದರಿಂದ ಕೆಪಿಟಿಸಿಎಲ್ ಹಾಗೂ ಬೆಸ್ಕಾಂ, ಎಸ್ಕಾಂಗಳು ತೀವ್ರ ಸಂಕಷ್ಟಕ್ಕೆ ಸಿಲುಕಲಿವೆ. ಆದ್ದರಿಂದ ಯಾವುದೇ ಕಾರಣಕ್ಕೂ ವಿದ್ಯುತ್ ಕ್ಷೇತ್ರ ಖಾಸಗೀಕರಣಕ್ಕೆ ಅವಕಾಶ ನೀಡಬಾರದು. ಇದನ್ನು ವಿರೋಧಿಸಿ ಹೋರಾಟ ನಡೆಸಬೇಕು ಎಂದು ಹೇಳಿದರು.
ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ ಮಾತನಾಡಿ, ವಿದ್ಯುತ್ ವಿತರಣಾ ಪರವಾನಗಿಯನ್ನು ಟಾಟಾ ಪವರ್‌ನಲ್ಲಿ ಪಡೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಟಾಟಾ ಪವರ್ ಕಂಪೆನಿಯರು ನಮ್ಮ ನೌಕರರಿಗೆ ಕೆಲಸ ಕೊಡದೆ ಅನಿವಾರ್ಯವಾಗಿ ಸ್ವಯಂ ನಿವೃತ್ತಿ ಪಡೆದುಕೊಳ್ಳುವಂತಹ ಪರಿಸ್ಥಿತಿಯನ್ನು ನಿರ್ಮಾಣ ಮಾಡುತ್ತಾರೆ. ಹಾಗಾಗಿ ನೌಕರರು, ನೌಕರ ಸಂಬAಧಿತ ಸಂಘಗಳು, ಒಕ್ಕೂಟಗಳು ಜತೆಗೂಡಿ ಖಾಸಗೀಕರಣ ವಿರೋಧಿಸಿ ಉಗ್ರ ಹೋರಾಟ ಮಾಡಬೇಕು ಎಂದು ಕರೆ ನೀಡಿದರು.
ರಾಜ್ಯದಲ್ಲಿ ೧೯ ಜಿಲ್ಲೆಗಳಲ್ಲಿ ಟಾಟಾ ಪವರ್ ಕಂಪೆನಿಯರು ಪರವಾನಗಿ ಪಡೆದುಕೊಳ್ಳುತ್ತಿದ್ದು, ಈಗಾಗಲೇ ಅವರೇ ಇಂಜಿನಿಯರ್‌ಗಳು, ಲೈನ್‌ಮನ್‌ಗಳನ್ನು ನೇಮಕ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಇದರಿಂದ ಬೆಸ್ಕಾಂ ನೌಕರರಿಗೆ ತೊಂದರೆಯಾಗಲಿದೆ ಎಂದರು.
ರಿಲೆಯನ್ಸ್ನವರು ಸಹ ೧೪ ಜಿಲ್ಲೆಗಳಲ್ಲಿ ವಿದ್ಯುತ್ ವಿತರಣಾ ಪರವಾನಗಿಯನ್ನು ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಈ ಪೈಕಿ ಪ್ರಮುಖವಾಗಿ ಬೆಂಗಳೂರು ನಗರವನ್ನು ಪಡೆದುಕೊಂಡಿದ್ದಾರೆ. ಆದ್ದರಿಂದ ನಾವೆಲ್ಲರೂ ಒಟ್ಟಾಗಿ ಇದರ ವಿರುದ್ಧ ಪತ್ರ ಚಳವಳಿಯನ್ನು ಮಾಡಬೇಕು ಎಂದು ಅವರು ಹೇಳಿದರು.
ಪ್ರತಿಭಟನೆ ಬಳಿಕ ಬೆಸ್ಕಾಂ ಮತ್ತು ಕೆಪಿಟಿಸಿಎಲ್ ನೌಕರರು ಎಂದಿನAತೆ ಕರ್ತವ್ಯಕ್ಕೆ ಹಾಜರಾದರು.
ಪ್ರತಿಭಟನೆಯಲ್ಲಿ ಬೆಸ್ಕಾಂನ ಅಧಿಕಾರಿಗಳಾದ ಪ್ರಕಾಶ್ ಎಂ.ವಿ., ಪ್ರಶಾಂತ್ ಕೂಡ್ಲಿಗಿ, ಜಗದೀಶ್ ಜಿ., ಸೋಮಶೇಖರಗೌಡ, ಪುರುಷೋತ್ತಮ್, ಹೆಚ್. ತಿಮ್ಮಪ್ಪ, ಎಂ.ಹೆಚ್. ವೆಂಕಟರಮಣಯ್ಯ ಸೇರಿದಂತೆ ಕೆಪಿಟಿಸಿಎಲ್ ಮತ್ತು ಬೆಸ್ಕಾಂ ಅಧಿಕಾರಿಗಳು, ಲೈನ್‌ಮನ್‌ಗಳು ಸೇರಿದಂತೆ ನೂರಾರು ಮಂದಿ ನೌಕರರು ಪಾಲ್ಗೊಂಡಿದ್ದರು.

(Visited 1 times, 1 visits today)