ತುಮಕೂರು: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-೨೦೨೬ ಪ್ರಕ್ರಿಯೆಯನ್ನು ತುಮಕೂರು ಜಿಲ್ಲೆಯಲ್ಲಿ ಅಧಿಕೃತವಾಗಿ ಆರಂಭಿಸಲಾಗಿದ್ದು, ಮತಗಟ್ಟೆ ಅಧಿಕಾರಿಗಳು ಮಂಗಳವಾರ ಜಿಲ್ಲೆಯಾದ್ಯಂತ ಮನೆ-ಮನೆಗಳಿಗೆ ಭೇಟಿ ನೀಡಿ ಮತದಾರರ ಗಣತಿ ನಮೂನೆಯನ್ನು ವಿತರಿಸುವ ಪ್ರಕ್ರಿಯೆ ನಡೆಯಿತು.
ತುಮಕೂರು ನಗರದ ನಜûರಾಬಾದ್ ಪ್ರದೇಶದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಖುದ್ದು ಮನೆ ಭೇಟಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮತದಾರರಿಗೆ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಯ ಮಹತ್ವ ಮತ್ತು ಮತದಾರರು ಮಾಡಬೇಕಿರುವ ಜವಾಬ್ದಾರಿಯ ಬಗ್ಗೆ ವಿವರಣೆ ನೀಡಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಆರಂಭವಾಗಿದ್ದು, ತುಮಕೂರು ಜಿಲ್ಲೆಯಾದ್ಯಂತ ಜೂನ್ ೩೦ ರಿಂದ ಜುಲೈ ೨೯ರವರೆಗೆ ಮತಗಟ್ಟೆ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಿ ಮತದಾರರ ಗಣತಿ ನಮೂನೆಯನ್ನು ವಿತರಿಸಲಿದ್ದಾರೆ ಎಂದರು.
ಸಮಗ್ರ ಪರಿಷ್ಕರಣೆ ಸಂದರ್ಭದಲ್ಲಿ ಮತಗಟ್ಟೆ ಅಧಿಕಾರಿಗಳು ಪ್ರತಿ ಮನೆ-ಮನೆಗೆ ತೆರಳಿ ನಮೂನೆ ಭರ್ತಿ ಮಾಡಿಸಿಕೊಳ್ಳುವ ಪ್ರಕ್ರಿಯೆ ನಡೆಯುವುದರಿಂದ ಪ್ರತಿಯೊಬ್ಬ ಮತದಾರರೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ಮತಗಟ್ಟೆ ಅಧಿಕಾರಿಗಳು ೨-೩ ಬಾರಿ ಮನೆಗಳಿಗೆ ಭೇಟಿ ಸಂದರ್ಭದಲ್ಲೂ ಮನೆ ಬಾಗಿಲು ಮುಚ್ಚಿರುವುದು ಕಂಡು ಬಂದಲ್ಲಿ ಅದನ್ನು ಬೀಗ ಹಾಕಲಾಗಿದೆ ಎಂದು ನಮೂದಿಸುವರು. ಮತದಾರರ ಪಟ್ಟಿಯ ನಮೂನೆ ಭರ್ತಿ ಮಾಡಿ ಹಿಂದಿರುಗಿಸಿದ ಮನೆಗಳಿಗೆ ಪರಿಶೀಲನೆಯಾಗಿದೆ ಎಂದು ಸ್ಟಿಕರ್ ಅಂಟಿಸಲಾಗುವುದು ಎಂದು ಅವರು ತಿಳಿಸಿದರು.
ತುಮಕೂರು ಜಿಲ್ಲೆಯ ೧೧ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ೨೬೨೭ ಮತಗಟ್ಟೆ ಅಧಿಕಾರಿಗಳ ಮೂಲಕ ಪ್ರತಿ ಮತದಾರರ ಮನೆಗಳನ್ನು ಭೇಟಿ ಮಾಡಿ ಪರಿಷ್ಕರಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮನೆ ಭೇಟಿ ಕಾರ್ಯಕ್ರಮ ಜೂನ್ ೩೦ ರಿಂದ ಜುಲೈ ೨೯ರವರೆಗೆ ನಡೆಯಲಿದ್ದು, ಆಗಸ್ಟ್ ೫ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಹಕ್ಕು ಮತ್ತು ಆಕ್ಷೇಪಣೆಗಾಗಿ ಸೆಪ್ಟೆಂಬರ್ ೪ರವರೆಗೂ ಅವಕಾಶವಿದ್ದು, ಆಗಸ್ಟ್ ೫ ರಿಂದ ಅಕ್ಟೋಬರ್ ೩ರವರೆಗೆ ಮತದಾರರಿಂದ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಶೀಲಿಸಿ ಸರಿಪಡಿಸಲು ಅವಕಾಶವಿರುತ್ತದೆ. ಈ ಹಂತದಲ್ಲಿ ಮತದಾರರು ಕರಡು ಮತದಾರರ ಪಟ್ಟಿಯಲ್ಲಿ ಗೊಂದಲಗಳಿದ್ದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಿ ಸರಿಪಡಿಸಿಕೊಳ್ಳಬಹುದಾಗಿದೆ. ಇದಕ್ಕಾಗಿ ಸಾಕಷ್ಟು ಸಮಯವನ್ನು ಮೀಸಲಿರಿಸಲಾಗಿದೆ. ಅಂತಿಮವಾಗಿ ಅಕ್ಟೋಬರ್ ೭ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು.
೨೦೦೨ರ ಮತದಾರರ ಪಟ್ಟಿಯಂತೆ ಈಗಾಗಲೇ ಮತದಾರರ ವಿವರಗಳನ್ನು ಮ್ಯಾಪಿಂಗ್ ಮಾಡಲಾಗಿದ್ದು, ಶೇ.೯೮ರಷ್ಟು ಮತದಾರರ ಪಟ್ಟಿ ಮ್ಯಾಪಿಂಗ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಜಿಲ್ಲೆಯಲ್ಲಿ ಸುಮಾರು ೨೨ಲಕ್ಷ ಮತದಾರರಿದ್ದಾರೆ. ಈಗಾಗಲೇ ಎಲ್ಲಾ ಮತದಾರರ ಮ್ಯಾಪಿಂಗ್ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಪರಿಷ್ಕರಣೆ ಪರಿಶೀಲನೆ ಸಂದರ್ಭದಲ್ಲಿ ನೀಡಬೇಕಿರುವ ೧೨ ದಾಖಲೆಗಳನ್ನು ಈ ಸಂದರ್ಭದಲ್ಲಿ ನೀಡುವ ಅವಶ್ಯಕತೆ ಇರುವುದಿಲ್ಲವೆಂದು ಅವರು ತಿಳಿಸಿದರು.
ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಇದೊಂದು ಪವಿತ್ರವಾದ ಮತ್ತು ಸದೃಢ ಪ್ರಜಾಪ್ರಭುತ್ವ ವ್ಯವಸ್ಥೆಯ ಪರಿಪೂರ್ಣ ಕೆಲಸವಾಗಿದ್ದು, ಸಾರ್ವಜನಿಕರು ಯಾವುದೇ ಗೊಂದಲಗಳಿಲ್ಲದೆ ಈ ಪ್ರಕ್ರಿಯೆಯಲ್ಲಿ ಭಾಗವಹಿಸಿ ದೇಶದ ಸಮಗ್ರತೆಯನ್ನು ಎತ್ತಿಹಿಡಿಯಬೇಕು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮಹಾನಗರಪಾಲಿಕೆಯ ಆಯುಕ್ತೆ ಬಿ. ಶುಭ, ಚುನಾವಣಾ ತಹಶೀಲ್ದಾರ್ ನಾಗಭೂಷಣ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)