ತುಮಕೂರು: ಜಿಲ್ಲೆಯ ಕೊರಟಗೆರೆ ತಾಲ್ಲೂಕಿಗಿಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ವಿ. ಅಶ್ವಿಜ ದಿಢೀರ್ ಭೇಟಿ ನೀಡಿ, ವಿಬಿ-ಜಿ ರಾಮ್ ಜಿ ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿಯನ್ನು ಪರಿಶೀಲಿಸಿದರು.
ಕೊರಟಗೆರೆ ತಾಲ್ಲೂಕಿನ ದೊಡ್ಡಸಾಗ್ಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಕ್ತರಹಳ್ಳಿ ಗ್ರಾಮದ ರಾಮಯ್ಯ ಅವರ ಜಮೀನಿನಿಂದ ವೀರ ಚೌಡಪ್ಪನ ಜಮೀನಿನವರೆಗೆ ಕಾಲುವೆ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಿದ ಅವರು, ವಿಬಿ-ಜಿ ರಾಮ್ ಜಿ ಯೋಜನೆಯಡಿ ಒಂದು ಆರ್ಥಿಕ ವರ್ಷದಲ್ಲಿ ಒಂದು ಕುಟುಂಬಕ್ಕೆ ೧೨೫ ದಿನಗಳ ಕೂಲಿ ಕೆಲಸ ನೀಡಲಾಗುತ್ತಿದೆ. ಪುರುಷರು ಹಾಗೂ ಮಹಿಳೆಯರಿಗೆ ಸಮಾನವಾಗಿ ದಿನಕ್ಕೆ ೩೮೨ ರೂ.ಗಳ ಕೂಲಿ ನೀಡಲಾಗುತ್ತಿದ್ದು, ಗ್ರಾಮೀಣ ಭಾಗದ ಜನತೆ ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದುವAತೆ ಸಲಹೆ ನೀಡಿದರು.
ಕಾಲುವೆ ಅಭಿವೃದ್ಧಿ ಕಾಮಗಾರಿಯಲ್ಲಿ ೧೫ ಮಂದಿ ಕೂಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದು, ವಿಜಿ-ಜಿ ರಾಮ್ ಜಿ ಯೋಜನೆಯಡಿ ಸ್ಥಳೀಯವಾಗಿಯೇ ಕೆಲಸ ನೀಡಿದ ಕಾರಣ ಗ್ರಾಮದ ಕೂಲಿ ಕಾರ್ಮಿಕರು ಸಂತಸ ವ್ಯಕ್ತಪಡಿಸಿ, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿ, ಜೀವನೋಪಾಯ ಕಾಮಗಾರಿಗಳನ್ನು ಎಷ್ಟು ನೀಡಿದರೂ, ತಾವು ಮಾಡಲು ಸಿದ್ಧವಿರುವುದಾಗಿ ತಿಳಿಸಿದರು.
ಕೂಲಿ ಕಾರ್ಮಿಕರ ಕೂಲಿ ಕೆಲಸದ ಬೇಡಿಕೆ, ಕೂಲಿ ಕಾರ್ಮಿಕರ ಹಾಜರಾತಿ ಪ್ರಕ್ರಿಯೆ ಸೇರಿದಂತೆ ಕಾಮಗಾರಿ ಸ್ಥಳದಲ್ಲಿ ಕೂಲಿ ಕಾರ್ಮಿಕರಿಗೆ ಒದಗಿಸಲಾದ ಕುಡಿಯುವ ನೀರಿನ ಸೌಲಭ್ಯ, ನೆರಳಿನ ಸೌಲಭ್ಯಗಳನ್ನು ಪರಿಶೀಲಿಸಿದರು.
ಇದೇ ವೇಳೆ ಸ್ಥಳದಲ್ಲಿಯೇ ಹಾಜರಿದ್ದ ಕೊರಟಗೆರೆ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಅಪೂರ್ವ ಸಿ. ಅನಂತರಾಮು ಹಾಗೂ ಸಹಾಯಕ ನಿರ್ದೇಶಕ(ಗ್ರಾ.ಉ.) ಎಂ.ಬಿ.ಗುರುಮೂರ್ತಿ, ತಾಂತ್ರಿಕ ಸಂಯೋಜಕ ಮಧು ಕೆ.ಎಸ್. ಹಾಗೂ ತಾಂತ್ರಿಕ ಸಹಾಯಕಿ ಹರ್ಷಿತಾ ಅವರೊಂದಿಗೆ ಕಾಮಗಾರಿ ಕುರಿತು ಚರ್ಚಿಸಿ, ಕಾಮಗಾರಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಸೂಚಿಸಿದರು.
ಬಳಿಕ ಶಾಲಾ ತರಗತಿಗಳಿಗೆ ಭೇಟಿ ನೀಡಿದ ಸಿಇಒ ಅವರು, ಮಕ್ಕಳ ಇ-ಹಾಜರಾತಿ, ಶಿಕ್ಷಕರ ಹಾಜರಾತಿಯನ್ನು ಪರಿಶೀಲಿಸಿ, ಶಾಲಾ ಮುಖ್ಯೋಪಾಧ್ಯಾಯರಿಗೆ ಇ-ಹಾಜರಾತಿಯನ್ನು ನಿತ್ಯ ಪಡೆಯುವಂತೆ ಸೂಚನೆ ನೀಡಿದರು. ಇದೇ ವೇಳೆ ಶಾಲಾ ಮಕ್ಕಳೊಂದಿಗೆ ಕೆಲಕಾಲ ಸಂವಾದ ನಡೆಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಪಿಡಿಒ ನಾಗರಾಜು, ಶಾಲಾ ಮುಖ್ಯೋಪಾಧ್ಯಾಯರು ಸೇರಿದಂತೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರು ಹಾಜರಿದ್ದರು.
(Visited 1 times, 1 visits today)





