ತುಮಕೂರು: ರಾಜ್ಯದಲ್ಲಿ ಸಮರ್ಪಕ ಮಳೆಯಾಗದ ಪರಿಣಾಮ, ಭೀಕರ ಬರ ಪರಿಸ್ಥಿತಿ ಉಂಟಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ರೈತರು ಮತ್ತು ಸಾರ್ವಜನಿಕರ ನೆರವಿಗೆ ಸರ್ಕಾರ ನಿಲ್ಲಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ: ಜಿ.ಪರಮೇಶ್ವರ ತಿಳಿಸಿದರು.
ಜಿಲ್ಲೆಯ ಶಿರಾ ತಾಲೂಕು ಮೇಲುಕುಂಟೆ ಗ್ರಾಮದ ಶೇಂಗಾ ಬಿತ್ತನೆಯ ಜಮೀನಿಗೆ ಸೋಮವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಎಲ್ಲಿಯೂ ಸಮರ್ಪಕವಾಗಿ ಮಳೆಯಾಗದ ಕಾರಣ ಬೆಳೆಗಳು ರೈತರ ಕೈತಪ್ಪಿ ಹೋಗಿವೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಒಂದಿಷ್ಟು ಮಳೆಯಾಗಿರುವುದು ಬಿಟ್ಟರೆ ಬೇರೆಲ್ಲೂ ಮಳೆಯ ಸೂಚನೆಗಳೇ ಇಲ್ಲ. ಇಡೀ ರಾಜ್ಯದಲ್ಲಿ ಭೀಕರ ಬರ ತಲೆದೋರಿದೆ ಎಂದರು.
ತುಮಕೂರು ಜಿಲ್ಲೆಯ ೧೦ ತಾಲೂಕುಗಳಲ್ಲಿ ಬರದ ಛಾಯೆ ಇದೆ. ರೈತರು ಕಂಗಾಲಾಗಿದ್ದಾರೆ. ಎಷ್ಟರ ಮಟ್ಟಿಗೆ ಅಂದರೆ ಕುಡಿಯುವ ನೀರಿಗೂ ಸಮಸ್ಯೆಯಾಗುತ್ತಿರುವುದನ್ನು ನೋಡುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಸರ್ಕಾರ ಅವರ ನೆರವಿಗೆ ನಿಲ್ಲಬೇಕು. ಆ ನಿಟ್ಟಿನಲ್ಲಿ ಈಗಾಗಲೇ ಅನೇಕ ಕ್ರಮಗಳನ್ನು ಕೈಗೊಂಡಿದ್ದೇವೆ. ಕುಡಿಯುವ ನೀರಿಗಾಗಿ ಪ್ರತಿ ಜಿಲ್ಲೆಗೆ ೫ ಕೋಟಿ ರೂ. ಕೊಟ್ಟಿದ್ದೇವೆ. ಸಮಸ್ಯೆಗಳು ಎದುರಾದ ಸಂದರ್ಭದಲ್ಲಿ ಅವರಿಗೆ ಪರಿಹಾರ ಕೊಡಬೇಕು. ಅವರ ಸಹಾಯಕ್ಕೆ ನೆರವು ನೀಡುವಂತೆ ಈಗಾಗಲೇ ನಾನು ಮತ್ತು ಮುಖ್ಯಮಂತ್ರಿಗಳು ಸಂಪುಟದಲ್ಲಿ ಚರ್ಚೆ ನಡೆಸಿ ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದು ಹೇಳಿದರು.
ಪ್ರತಿ ಜಿಲ್ಲೆಯಲ್ಲಿನ ಬರ ಪರಿಸ್ಥಿತಿಯ ಪರಿವೀಕ್ಷಣೆಗಾಗಿ ಮುಖ್ಯಮಂತ್ರಿಗಳು ಸಚಿವರುಗಳಿಗೆ ಜವಾಬ್ದಾರಿ ನೀಡಿದ್ದಾರೆ. ತುಮಕೂರಿನಲ್ಲಿ ನಾನು ಇಂದು ಮತ್ತು ನಾಳೆ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚಿಸಿ ವರದಿ ಸಿದ್ಧಪಡಿಸಲಾಗುವುದು. ಬರ ಪರಿಸ್ಥಿತಿಯ ನಿರ್ವಹಣೆಗೆ ನೆರವು ಕೋರಿ ಈಗಾಗಲೇ ಕೇಂದ್ರಕ್ಕೂ ಪತ್ರ ಬರೆಯಲಾಗಿದೆ. ಆದರೆ, ಇನ್ನೂ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯದಲ್ಲಿ ೨೪೦ ತಾಲೂಕುಗಳಲ್ಲಿ ಬರ ಪರಿಸ್ಥಿತಿಯಿದ್ದು, ಈ ಬಗ್ಗೆ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದರು.
ಬರ ಘೋಷಣೆ ಮಾಡಬೇಕಾದರೆ ಕೇಂದ್ರದ ಕೆಲವು ನಿಯಮಗಳಿವೆ. ಹಾಗಾಗಿ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ವರದಿ ಬಂದ ಕೂಡಲೇ ನಮಗೊಂದು ಚಿತ್ರಣ ಸಿಗುತ್ತದೆ. ಆ ಬಳಿಕ ಬೆಳೆ ನಷ್ಟ ಪರಿಹಾರ ನೀಡಲು ಕ್ರಮ ತೆಗೆದುಕೊಳ್ಳಲಾಗುವುದು. ನಾನು ಇಂದು ಶಿರಾ, ಪಾವಗಡ, ಮಧುಗಿರಿ, ಕೊರಟಗೆರೆ ತಾಲೂಕಿಗೆ ಭೇಟಿ ನೀಡಿ, ನಾಳೆ ಗುಬ್ಬಿ, ತಿಪಟೂರು, ಚಿಕ್ಕನಾಯಕನಹಳ್ಳಿ, ತುರುವೇಕೆರೆ ತಾಲ್ಲೂಕಿಗೆ ಭೇಟಿ ನೀಡುತ್ತೇನೆ. ಬಳಿಕ ಅಧ್ಯಯನ ಮಾಡಿ ವರದಿಯನ್ನು ಸಿದ್ಧಪಡಿಸಲಾಗುವುದು ಎಂದು ತಿಳಿಸಿದರು.
ತುಮಕೂರಿನಲ್ಲಿ ೧೧ ತಾಲ್ಲೂಕುಗಳಿಗೆ ಬರ ಪರಿಹಾರದ ಮೊತ್ತ ಹೇಗೆ ವಿಭಜಿಸಲಾಗುತ್ತದೆ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ೫ ಕೋಟಿ ರೂ. ಪ್ರತಿ ಜಿಲ್ಲೆಗಳಿಗಷ್ಟೆ. ಅದನ್ನು ಜಿಲ್ಲಾ ಪಂಚಾಯತ್ ಸಿಇಒಗಳಿಗೆ ನೀಡಲಾಗಿದೆ. ವಿಧಾನಸಭಾ ಕ್ಷೇತ್ರವಾರು ಶಾಸಕರಿಗೆ ತಲಾ ೧ ಕೋಟಿ ರೂ.ಗಳನ್ನು ನೀಡಲಾಗಿದೆ. ಹಣದ ಕೊರತೆಯಾದಲ್ಲಿ ಜಿಲ್ಲಾಧಿಕಾರಿ ಪಿಡಿ ಖಾತೆಯಲ್ಲಿರುವ ಹಣವನ್ನು ತುರ್ತು ಸಮಯದಲ್ಲಿ ಖರ್ಚು ಮಾಡುವಂತೆ ಈಗಾಗಲೇ ತಿಳಿಸಲಾಗಿದೆ ಎಂದರು.
ರೈತರು ಇಂದು ಬಹಳಷ್ಟು ಸಂಕಷ್ಟದಲ್ಲಿದ್ದಾರೆ. ಫಸಲ್ ಬಿಮಾ ಯೋಜನೆಯಡಿ ರೈತರು ತಮ್ಮ ವಿಮೆ ಹಣ ಇನ್ನೂ ಬಂದಿಲ್ಲ ಎಂದು ನನಗೆ ಮಾಹಿತಿ ನೀಡಿದ್ದಾರೆ. ರೈತರಿಗೆ ಕಷ್ಟ ಬಂದಾಗ ವಿಮೆ ಹಣವನ್ನು ನೀಡಬೇಕಿರುವುದು ವಿಮಾ ಕಂಪನಿಗಳ ಕರ್ತವ್ಯ. ಈ ಬಗ್ಗೆ ಸಭೆ ನಡೆಸಿ ಸಕಾಲದಲ್ಲಿ ವಿಮಾ ಹಣ ಪಾವತಿಸಲು ವಿಮಾ ಕಂಪನಿಯವರಿಗೆ ಕಟ್ಟುನಿಟ್ಟಿನ ಸೂಚನೆಯನ್ನು ನೀಡಲಾಗಿದೆ ಎಂದು ಹೇಳಿದರು.
ಕಂತಿನ ಹಣವನ್ನು ಸರ್ಕಾರವೇ ಭರಿಸಬೇಕು ಎಂಬ ಮಾಧ್ಯಮದವರ ಮಾತಿಗೆ ಪ್ರತಿಕ್ರಿಯಿಸಿ, ರೈತರಿಗೆ ನಾವು ನೆರವು ನೀಡುವುದು, ಕಂತು ಕಟ್ಟುವುದು, ತೀರ್ಮಾನ ಮಾಡುವುದು ಒಂದು ಭಾಗ. ಆದರೆ ಕಂಪೆನಿಯವರು ಹಣ ಕೊಡಬೇಕಲ್ಲವೇ. ಕಳೆದ ವರ್ಷ ೭ ಸಾವಿರ ಜನ ಕಂತು ಕಟ್ಟಿದ್ದಾರೆ. ಆದರೆ ಇನ್ಶೂರೆನ್ಸ್ ಕಂಪೆನಿಯವರು ಹಣವನ್ನು ಕೊಟ್ಟಿಲ್ಲ. ಹೀಗಾದರೆ ರೈತರಿಗೆ ಇನ್ಶೂರೆನ್ಸ್ ಮೇಲೆ ಹೇಗೆ ನಂಬಿಕೆ ಬರುತ್ತದೆ ಎಂದು ಪ್ರಶ್ನಿಸಿದರು.
ಬರಪೀಡಿತ ಗ್ರಾಮಗಳಿಗೆ ಭೇಟಿ-ಪರಿಶೀಲನೆ: ಇದಕ್ಕೂ ಮುನ್ನ ಅವರು ಶಿರಾ ತಾಲ್ಲೂಕು ಕಾಗೆಲಿಂಗನಹಳ್ಳಿ ಮತ್ತು ಮೇಲುಕುಂಟೆ ಗ್ರಾಮಗಳ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಬರ ಪರಿಸ್ಥಿತಿ ಹಾಗೂ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಶೀಲಿಸಿದರು.
ಕಾಗೆಲಿಂಗನಹಳ್ಳಿಯ ರೈತರು ಹಾಗೂ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿದ ಅವರು, ಬರದಿಂದಾಗಿ ಎದುರಾಗಿರುವ ಸಮಸ್ಯೆಗಳು, ಕೃಷಿ ಚಟುವಟಿಕೆಗಳ ಮೇಲಿನ ಪರಿಣಾಮ ಹಾಗೂ ಕುಡಿಯುವ ನೀರಿನ ಲಭ್ಯತೆ ಕುರಿತು ಮಾಹಿತಿ ಪಡೆದರು.
ಈ ವೇಳೆ ರೈತರು ತಮ್ಮ ಸಮಸ್ಯೆಗಳನ್ನು ಉಪ ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ರೈತರ ಅಹವಾಲುಗಳನ್ನು ಆಲಿಸಿದ ಅವರು, ಗ್ರಾಮದಲ್ಲಿ ಎದುರಾಗಿರುವ ಸಮಸ್ಯೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಬರ ಪರಿಸ್ಥಿತಿಯಿಂದ ಜನರು ಹಾಗೂ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದAತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು.
ನಂತರ ಮೇಲುಕುಂಟೆ ಗ್ರಾಮದ ಶೇಂಗಾ ಬಿತ್ತನೆ ಮಾಡಿರುವ ಜಮೀನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಿತ್ತನೆ ಮಾಡಿ ೪೫ ದಿನ ಕಳೆದರೂ ಸಮರ್ಪಕವಾಗಿ ಮಳೆಯಾಗದಿರುವ ಹಿನ್ನೆಲೆಯಲ್ಲಿ ತೇವಾಂಶ ಕೊರತೆಯಿಂದ ಶೇಂಗಾ ಬೆಳೆ ಕಾಳು ಕಟ್ಟದಿರುವುದು ಕಂಡು ಬಂದಿತು. ಫಸಲ್ ಬೀಮಾ ಯೋಜನೆಯಡಿ ವಿಮೆ ಕಟ್ಟಿದ್ದರೂ ಬೆಳೆ ನಷ್ಟದ ವಿಮೆ ಹಣ ಪಾವತಿಯಾಗದಿರುವ ಕುರಿತು ರೈತರು ತಮ್ಮ ಸಮಸ್ಯೆಯನ್ನು ಡಿಸಿಎಂ ಜಿ.ಪರಮೇಶ್ವರ ಅವರ ಗಮನಕ್ಕೆ ತಂದರು.
ಈ ವೇಳೆ ಶಿರಾ ತಾಲ್ಲೂಕಿನ ೪೨ ಗ್ರಾಮ ಪಂಚಾಯಿತಿಗಳಿಗೆ ಸಂಬAಧಿಸಿದAತೆ ಕಳೆದ ಮೂರು ವರ್ಷಗಳ ರೈತರಿಗೆ ವಿಮೆ ಪಾವತಿ ಮಾಡಿರುವ ಮಾಹಿತಿ ನೀಡುವಂತೆ ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.
ಬಳಿಕ ಶಿರಾ ತಾಲ್ಲೂಕಿನ ತಡಕಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಮ್ಮನಹಳ್ಳಿಯಲ್ಲಿ ‘ವಿಬಿಜಿ ರಾಮ್ ಜಿ’ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಯನ್ನು ಅವರು ಪರಿಶೀಲಿಸಿದರು.
ಗ್ರಾಮದ ಕೆರೆಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಹೂಳೆತ್ತುವ ಕಾಮಗಾರಿಯನ್ನು ಪರಿಶೀಲಿಸಿ, ಕಾಮಗಾರಿ ಪ್ರಗತಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಈ ವೇಳೆ ಅರ್ಹ ಫಲಾನುಭವಿಗಳಿಗೆ ಜಾಬ್ ಕಾರ್ಡ್ ವಿತರಿಸಿದರು.
ವಿಬಿಜಿ ರಾಮ್ ಜಿ ಯೋಜನೆಯಡಿ ಜನರಿಗೆ ನಿಯಮಿತವಾಗಿ ಕೆಲಸ ನೀಡಬೇಕು. ಕಾಮಗಾರಿಯ ವೇತನ ಪಾವತಿಯಲ್ಲಿ ಯಾವುದೇ ಕಾರಣಕ್ಕೂ ವಿಳಂಬವಾಗದAತೆ ಅಗತ್ಯ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲ್ಲಿ ಒಂದು ಲಕ್ಷ ಕ್ವಿಂಟಲ್ ಮೇವಿನ ಬೀಜ ವಿತರಣೆ : ನೀರಿನ ಸೌಲಭ್ಯ ಇರುವ ರೈತರು ಮೇವು ಬೆಳೆಸಲು ಉತ್ತೇಜಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ೧ ಲಕ್ಷ ಕ್ವಿಂಟಲ್ ಮೇವಿನ ಬೀಜ ವಿತರಿಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ: ಜಿ.ಪರಮೇಶ್ವರ ಅವರು ಹೇಳಿದರು.
ಪಾವಗಡ ತಾಲ್ಲೂಕಿನ ಕೆಲವು ಪ್ರದೇಶಗಳಲ್ಲಿ ಬರ ವೀಕ್ಷಣೆ ಮಾಡಿದ ಬಳಿಕ ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ರೈತರಿಗೆ ಮೇವಿನ ಬೀಜ ಕಿಟ್‌ಗಳನ್ನು ವಿತರಿಸಿದರು.
ರಾಜ್ಯದಲ್ಲಿ ಎಲ್ಲ ಸಚಿವರು ಬರ ಪರಿಸ್ಥಿತಿಯನ್ನು ಪರಿಶೀಲಿಸಿ, ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ. ಬಳಿಕ ವರದಿ ಸಲ್ಲಿಸುವ ಮೂಲಕ ಬರ ಪರಿಸ್ಥಿತಿಯ ಬಗ್ಗೆ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗುವುದು. ಅಗತ್ಯ ಪರಿಹಾರ ಮಂಜೂರು ಮಾಡಲು ಒತ್ತಾಯಿಸಲಾಗುವುದು. ಈ ತಿಂಗಳ ಅಂತ್ಯದ ವೇಳೆಗೆ ವರದಿ ಸಲ್ಲಿಸುತ್ತೇವೆ ಎಂದು ಅವರು ತಿಳಿಸಿದರು.
ಈ ವೇಳೆ ಪಾವಗಡ ಶಾಸಕ ಹೆಚ್.ವಿ. ವೆಂಕಟೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

(Visited 1 times, 1 visits today)