ತುಮಕೂರು: ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂಬರ್ ೨೮ರ ಹರವೆಲೆ ಭಾಗದಲ್ಲಿರುವ ಗೆದ್ದಲಹಳ್ಳಿ ಪ್ರದೇಶದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ಸ್ಥಳೀಯ ನಿವಾಸಿಗಳು ಪರದಾಡುವಂತಾಗಿದೆ.
ಸುಮಾರು ೩೫೦ಕ್ಕೂ ಹೆಚ್ಚು ಮನೆಗಳನ್ನು ಹೊಂದಿರುವ ಈ ಪ್ರದೇಶದಲ್ಲಿ ೧,೫೦೦ಕ್ಕೂ ಅಧಿಕ ಜನರು ವಾಸವಾಗಿದ್ದಾರೆ. ಆದರೆ, ಇಷ್ಟೊಂದು ದೊಡ್ಡ ಸಂಖ್ಯೆಯ ಜನಸಂಖ್ಯೆ ಇರುವ ಪ್ರದೇಶಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳು ಮಾತ್ರ ಇನ್ನೂ ಸಮರ್ಪಕವಾಗಿ ದೊರೆತಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ.
ಕಳೆದ ೨೫ರಿಂದ ೩೦ ವರ್ಷಗಳಿ ಂದ ಇದೇ ಪರಿಸ್ಥಿತಿಯಲ್ಲಿ ಜೀವನ ನಡೆಸುತ್ತಿದ್ದೇವೆ ಎಂದು ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.
ವಿಶೇಷವಾಗಿ ಒಳಚರಂಡಿ ಹಾಗೂ ಚರಂಡಿ ವ್ಯವಸ್ಥೆಯ ಸಮಸ್ಯೆ ಇಲ್ಲಿನ ಜನರನ್ನು ತೀವ್ರವಾಗಿ ಕಾಡುತ್ತಿದೆ. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆ ಬಂದ ಸಂದರ್ಭದಲ್ಲಿ ಮಳೆನೀರು ಸರಾಗವಾಗಿ ಹರಿದು ಹೋಗದೆ ರಸ್ತೆಗಳಲ್ಲೇ ನಿಂತು, ಕೆಲವೊಮ್ಮೆ ಮನೆಗಳಿಗೂ ನೀರು ನುಗ್ಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.
ಇದರಿಂದ ಮನೆಗಳಲ್ಲಿರುವ ವಸ್ತುಗಳು ಹಾನಿಗೊಳಗಾಗುವುದರ ಜೊತೆಗೆ, ಕೊಳಚೆ ನೀರು ಹಾಗೂ ಮಳೆ ನೀರು ಒಂದೇ ಕಡೆ ಸೇರಿ ಸಾಂಕ್ರಾಮಿಕ ರೋಗಗಳ ಭೀತಿಯೂ ಎದುರಾಗಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಇಲ್ಲಿನ ಸಮಸ್ಯೆಗಳ ಬಗ್ಗೆ ಹಲವು ಬಾರಿ ಸಂಬAಧಪಟ್ಟ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ನಿವಾಸಿಗಳು ಆರೋಪಿಸಿದ್ದಾರೆ.
ಮಹಾನಗರ ಪಾಲಿಕೆ ಸದಸ್ಯರು, ಸ್ಥಳೀಯ ಶಾಸಕರು ಹಾಗೂ ಪಾಲಿಕೆ ಅಧಿಕಾರಿಗಳು ಈ ಭಾಗದ ಸಮಸ್ಯೆಗಳತ್ತ ಗಮನ ಹರಿಸಬೇಕು ಎಂದು ಜನರು ಒತ್ತಾಯಿಸಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಮತದಾರರ ಬಳಿ ಬಂದು ಮತ ಕೇಳುವ ಜನಪ್ರತಿನಿಧಿಗಳು, ಚುನಾವಣೆ ಮುಗಿದ ನಂತರ ಇಲ್ಲಿನ ಸಮಸ್ಯೆಗಳತ್ತ ಗಮನ ಹರಿಸುತ್ತಿಲ್ಲ ಎಂಬ ಅಸಮಾಧಾನವೂ ಸ್ಥಳೀಯರಲ್ಲಿ ವ್ಯಕ್ತವಾಗಿದೆ.
ವಿಧಾನಸಭೆ, ಲೋಕಸಭೆ ಹಾಗೂ ಮಹಾನಗರ ಪಾಲಿಕೆ ಚುನಾವಣೆಗಳ ಸಂದರ್ಭದಲ್ಲಿ ಮತ ಚಲಾಯಿಸುವ ಮೂಲಕ ತಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತಿರುವ ಇಲ್ಲಿನ ನಿವಾಸಿಗಳಿಗೆ, ಕನಿಷ್ಠ ಮೂಲಭೂತ ಸೌಕರ್ಯಗಳನ್ನಾದರೂ ಒದಗಿಸುವುದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
(Visited 1 times, 1 visits today)





