ಕೊರಟಗೆರೆ: ಯಾವುದೇ ಕಾರಣಕ್ಕೂ ಕ್ಷೇತ್ರವನ್ನು ಬಿಟ್ಟು ಹೊರಗೆ ಹೋಗುವುದಿಲ್ಲ ಎಂದು ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟಪಡಿಸಿದ್ದಾರೆ.
ಅಭಿಮಾನಿಗಳು ಹಾಗೂ ಕಾರ್ಯಕರ್ತರು ಆಯೋಜಿಸಿದ್ದ ತಮ್ಮ ೫೮ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡ ಅವರು, ಪಟ್ಟಣದ ಕಟ್ಟೆ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅಭಿಮಾನಿಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ೨೫ ಕೆ.ಜಿ. ತೂಕದ ಕೇಕ್ ಕತ್ತರಿಸಿ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಸಂಭ್ರಮಕ್ಕೆ ಸಾಕ್ಷಿಯಾದರು.
ಈ ಸಂದರ್ಭದಲ್ಲಿ ಪತ್ರಕರ್ತರು, ಮಾಜಿ ಶಾಸಕರು ಕ್ಷೇತ್ರವನ್ನು ತೊರೆಯಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ನಿಮ್ಮ ಪ್ರತಿಕ್ರಿಯೆ ಏನು? ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸುಧಾಕರ್ ಲಾಲ್, ಇಂದು ನನ್ನ ಹುಟ್ಟುಹಬ್ಬ. ಈ ದಿನ ಈ ಮಾತು ಬೇಡ. ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೊರಗೆ ಹೋಗುವುದಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಎಲ್ಲವನ್ನೂ ತಿಳಿಸುತ್ತೇನೆ ಎಂದು ಹೇಳಿದರು.
ಮಾಜಿ ಶಾಸಕರ ಈ ಹೇಳಿಕೆಗೆ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿ ಸಂಭ್ರಮಿಸಿದರು.
ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳು ಹಾಗೂ ಕಾರ್ಯಕರ್ತರ ವತಿಯಿಂದ ಆಸ್ಪತ್ರೆಯ ರೋಗಿಗಳಿಗೆ ಬ್ರೆಡ್ ಮತ್ತು ಹಣ್ಣುಗಳನ್ನು ವಿತರಿಸಲಾಯಿತು. ಸಾರ್ವಜನಿಕರಿಗೆ ಸಿಹಿ ಹಾಗೂ ತಿಂಡಿ ವಿತರಿಸಿ, ನೆಚ್ಚಿನ ನಾಯಕನಿಗೆ ಹೂಮಾಲೆ ಹಾಕಿ ಶುಭಾಶಯ ಕೋರಲಾಯಿತು. ಪಟ್ಟಣದ ಎಸ್‌ಎಸ್‌ಆರ್ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.
ಹುಟ್ಟುಹಬ್ಬದ ಸಂಭ್ರಮದಲ್ಲಿ ಅಭಿಮಾನಿ ಯೊಬ್ಬರು ತಮ್ಮ ನೆಚ್ಚಿನ ನಾಯಕನಿಗೆ ನೋಟುಗಳಿಂದ ತಯಾರಿಸಿದ ವಿಶೇಷ ಹಾರ ಹಾಕಿ ಶುಭ ಹಾರೈಸಿದ್ದು ಗಮನ ಸೆಳೆಯಿತು. ನೋಟಿನ ಹಾರ ಹಾಕಿ ಸನ್ಮಾನಿಸಿದ ಅಭಿಮಾನಿ, ಬಳಿಕ ಕೇಕ್ ಕತ್ತರಿಸುವ ಕಾರ್ಯಕ್ರಮದಲ್ಲೂ ಪಾಲ್ಗೊಂಡು ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಪ್ರಕಾಶ್ ಮಾತನಾಡಿ, ಮಾಜಿ ಶಾಸಕ ಸುಧಾಕರ್ ಲಾಲ್ ಅವರು ಕ್ಷೇತ್ರದ ಜನರೊಂದಿಗೆ ಸದಾ ಇದ್ದಾರೆ. ಅಧಿಕಾರದಲ್ಲಿದ್ದಾಗಲೂ, ಇಲ್ಲದಿದ್ದಾಗಲೂ ಜನರ ಕಷ್ಟಗಳಿಗೆ ಸ್ಪಂದಿಸಿದ್ದಾರೆ. ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಅನೇಕ ಬಡವರಿಗೆ ವೈಯಕ್ತಿಕವಾಗಿ ನೆರವಾಗಿ, ಆಸ್ಪತ್ರೆಗಳಲ್ಲಿ ಚಿಕಿತ್ಸೆ ದೊರಕಿಸಲು ಸಹಕರಿಸಿದ್ದಾರೆ. ಜನರ ಕುಟುಂಬದ ಕಾರ್ಯಕ್ರಮಗಳಿಗೂ ಮನೆಮಗಳಂತೆ ಸ್ಪಂದಿಸುತ್ತಾರೆ ಎಂದರು.
ಜೆಡಿಎಸ್ ಮುಖಂಡ ರಮೇಶ್, ಜೆಡಿಎಸ್ ಮುಖಂಡ ಶಶಿ, ಜೆಡಿಎಸ್ ಮುಖಂಡ ಲಂಬು ರಾಜಣ್ಣ ಮಾತನಾಡಿದರು.
ಜೆಡಿಎಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಲಕ್ಷ÷್ಮಣ್ ಮಾತನಾಡಿ, ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗುವುದಿಲ್ಲ ಎಂಬ ನಾಯಕನ ಹೇಳಿಕೆ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಮುಂದಿನ ದಿನಗಳಲ್ಲಿ ಅವರ ನೇತೃತ್ವದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಸ್ನೇಹಜೀವಿ ಪಿ.ಆರ್ ಸುಧಾಕರ್ ಲಾಲ್ ಅಭಿಮಾನಿ ಬಳಗ ಸೇರಿದಂತೆ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಪಾಲ್ಗೊಂಡು ನೆಚ್ಚಿನ ನಾಯಕನಿಗೆ ಶುಭ ಹಾರೈಸಿದರು.

(Visited 1 times, 1 visits today)