ಪಾವಗಡ: ತಾಲ್ಲೂಕು ಕಚೇರಿಯಲ್ಲಿ ತಾಲೂಕು ಆಡಳಿತದ ವತಿಯಿಂದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿಂದುಳಿದ ವರ್ಗಗಳ ಮಹಾನ್ ನೇತಾರ ಡಿ. ದೇವರಾಜ ಅರಸು ಅವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಅತ್ಯಂತ ಶ್ರದ್ಧಾ-ಭಕ್ತಿಯಿಂದ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಆರಂಭದಲ್ಲಿ ತಾಲೂಕು ಆಡಳಿತದ ವತಿಯಿಂದ ದೇವರಾಜ ಅರಸು ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣಕಾರರಾಗಿ ಆಗಮಿಸಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಕೆಂಪಯ್ಯ ರವರು ಮಾತನಾಡಿ ಮೈಸೂರು ರಾಜ್ಯವನ್ನು ‘ಕರ್ನಾಟಕ’ ಎಂದು ನಾಮಕರಣ ಮಾಡಿದ್ದು ಸುಲಭದ ಕೆಲಸವಾಗಿರಲಿಲ್ಲ. ಅದೊಂದು ದೊಡ್ಡ ಸವಾಲಾಗಿತ್ತು. ಅಂತಹ ಸವಾಲನ್ನು ಎದುರಿಸಿ ಗೆದ್ದ ಅರಸರು ಒಬ್ಬ ಮಾದರಿ ರಾಜಕಾರಣಿಯಾಗಿದ್ದರು. ಮುಖ್ಯಮಂತ್ರಿಯಾಗಿ ಅವರು ಜಾರಿಗೆ ತಂದ ಹಲವಾರು ಸಾಮಾಜಿಕ ಹಾಗೂ ಆಡಳಿತಾತ್ಮಕ ಸುಧಾರಣೆಗಳು ಸಮಾಜಕ್ಕೆ ದೊಡ್ಡ ಕೊಡುಗೆಯಾಗಿವೆ. ಅಂತಹ ಆದರ್ಶ ಮುಖ್ಯಮಂತ್ರಿಯ ಜನ್ಮದಿನವನ್ನು ಆಚರಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ದೇವರಾಜ ಅರಸರು ಕೇವಲ ಅಧಿಕಾರ ನಡೆಸಿದವರಲ್ಲ, ಬದಲಿಗೆ ತುಳಿತಕ್ಕೊಳಗಾದವರ ಧ್ವನಿಯಾಗಿ ನಿಂತವರು. ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ತಮ್ಮ ಜೀವಮಾನವನ್ನೇ ಮುಡುಪಾಗಿಟ್ಟರು. ಇಂದಿನ ಯುವ ಪೀಳಿಗೆ ಮತ್ತು ರಾಜಕಾರಣಿಗಳು ಅವರ ತತ್ತ÷್ವ, ಸಿದ್ಧಾಂತ ಹಾಗೂ ದೂರದೃಷ್ಟಿಯ ಆಡಳಿತ ವೈಖರಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದರು.
ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳಾದ ವೈ. ರವಿ ಯವರು ಮಾತನಾಡಿ ಹಿಂದುಳಿದ ವರ್ಗಗಳ ಹರಿಕಾರ ದೇವರಾಜ ಅರಸರು ‘ಉಳುವವನೇ ಭೂಮಿಯ ಒಡೆಯ’ ಕಾಯ್ದೆಯಂತಹ ಕ್ರಾಂತಿಕಾರಿ ಸುಧಾರಣೆಗಳನ್ನು ಜಾರಿಗೆ ತಂದರು. ಮಲಹೊರುವ ಪದ್ಧತಿಯನ್ನು ನಿರ್ಮೂಲನೆ ಮಾಡಿದರು ಸರ್ಕಾರವು ಹಿಂದುಳಿದ ವರ್ಗಗಳ ಶೈಕ್ಷಣಿಕ ಮತ್ತು ಸಾಮಾಜಿಕ ಪ್ರಗತಿಗಾಗಿ ದೇವರಾಜ ಅರಸು ಅವರ ಹೆಸರಿನಲ್ಲಿ ಅನೇಕ ಯೋಜನೆಗಳು ಹಾಗೂ ವಸತಿ ನಿಲಯಗಳ ಸೌಲಭ್ಯವನ್ನು ಜಾರಿಗೆ ತಂದಿದೆ. ಇಲಾಖೆಯ ವಸತಿನಿಲಯಗಳಲ್ಲಿ ಉಳಿದು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು, ಅರಸರಂತೆ ಸಮಾಜಮುಖಿ ಚಿಂತನೆಗಳನ್ನು ಬೆಳೆಸಿಕೊಂಡು ಉನ್ನತ ಮಟ್ಟಕ್ಕೇರಬೇಕು ಎಂದರು
ಲೋಕೇಶ್ ಪಾಳೇಗಾರ್ ಮಾತನಾಡಿದರು. ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಧು ಸೂದನ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಕುಮಾರ್, ಗೋಪಾಲಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರೇಣುಕಮ್ಮ, ಮೈಲಪ್ಪ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.
(Visited 1 times, 1 visits today)



