ಗುಬ್ಬಿ: ತಾಲ್ಲೂಕಿನ ಸೋಮಲಾಪುರ ಕೆರೆಯ ಪಕ್ಕದಲ್ಲೇ ಹೇಮಾವತಿ ನಾಲೆಯಲ್ಲಿ ನೀರು ಹರಿಯುತ್ತಿದ್ದರೂ, ಕೆರೆಗೆ ನೀರು ಹರಿಸದೆ ಅಧಿಕಾರಿಗಳು ನಿರ್ಲಕ್ಷ÷್ಯ ತೋರುತ್ತಿದ್ದಾರೆ ಎಂಬ ಆರೋಪ ಸ್ಥಳೀಯ ರೈತರು ಹಾಗೂ ಸಾರ್ವಜನಿಕರಿಂದ ಕೇಳಿಬಂದಿದೆ.
ಸೋಮಲಾಪುರ ಕೆರೆಯು ಹೇಮಾವತಿ ನಾಲಾ ವ್ಯಾಪ್ತಿಗೆ ಒಳಪಟ್ಟಿದ್ದು, ಕುಡಿಯುವ ನೀರಿನ ಯೋಜನೆಗೆ ಅನುಮೋದನೆಗೊಂಡಿರುವ ಪ್ರಮುಖ ಕೆರೆಯಾಗಿದೆ. ಈ ಕೆರೆ ಸುತ್ತಮುತ್ತಲಿನ ಸುಮಾರು ೨೦ಕ್ಕೂ ಹೆಚ್ಚು ಗ್ರಾಮಗಳಿಗೆ ಕುಡಿಯುವ ನೀರಿನ ಪ್ರಮುಖ ಮೂಲವಾಗಿದ್ದು, ನೂರಾರು ರೈತರ ಕೃಷಿ ಚಟುವಟಿಕೆಗಳಿಗೂ ಆಸರೆಯಾಗಿದೆ. ಆದರೆ ಸದ್ಯ ಕೆರೆ ಸಂಪೂರ್ಣವಾಗಿ ಖಾಲಿಯಾಗಿದ್ದು, ಬರದ ಪರಿಸ್ಥಿತಿ ನಿರ್ಮಾಣವಾಗಿದೆ.
ಕೆರೆ ಪಕ್ಕದ ಮುಖ್ಯ ನಾಲೆಯಲ್ಲಿ ಹೇಮಾವತಿ ನೀರು ಹರಿಯುತ್ತಿದ್ದರೂ, ಸೋಮಲಾಪುರ ಕೆರೆಗೆ ಮಾತ್ರ ನೀರು ಹರಿಸದಿರುವುದು ಗ್ರಾಮಸ್ಥರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಕೆರೆಗೆ ನೀರು ಬಾರದ ಪರಿಣಾಮ ಸುತ್ತಮುತ್ತಲಿನ ಕೃಷಿ ಭೂಮಿಗಳು ಬರಡಾಗುತ್ತಿದ್ದು, ರೈತರು ನೀರಿಗಾಗಿ ಪರದಾಡುವಂತಾಗಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ತೀವ್ರಗೊಳ್ಳುವ ಆತಂಕವನ್ನು ಗ್ರಾಮಸ್ಥರು ವ್ಯಕ್ತಪಡಿಸಿದ್ದಾರೆ.
ಈ ಭಾಗದ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಹಲವು ಕೊಳವೆಬಾವಿಗಳು ಈಗಾಗಲೇ ಅಂತರ್ಜಲ ಕುಸಿತದಿಂದ ಕೈಕೊಡುತ್ತಿವೆ. ಕೆರೆಯಲ್ಲಿ ನೀರು ಸಂಗ್ರಹವಾದರೆ ಅಂತರ್ಜಲ ಮಟ್ಟ ಹೆಚ್ಚಾಗಿ, ಸುತ್ತಮುತ್ತಲಿನ ಬೋರ್‌ವೆಲ್‌ಗಳಿಗೂ ಅನುಕೂಲವಾಗಲಿದೆ. ಆದರೆ ಕೆರೆ ಒಣಗಿರುವುದರಿಂದ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಎದುರಾಗುವ ಸಾಧ್ಯತೆಯಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಹೇಮಾವತಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ÷್ಯದಿಂದ ಸೋಮಲಾಪುರ ಕೆರೆಗೆ ನೀರು ಹರಿಸಲು ಸಾಧ್ಯವಾಗಿಲ್ಲ. ಕೂಡಲೇ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗಮನಹರಿಸಿ ಕೆರೆಗೆ ಹೇಮಾವತಿ ನೀರು ಹರಿಸುವ ಮೂಲಕ ರೈತರು ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಸೋಮಲಾಪುರ ವಿಎಸ್‌ಎಸ್‌ಎನ್ ಅಧ್ಯಕ್ಷ ಮಹೇಶ್ ಒತ್ತಾಯಿಸಿದ್ದಾರೆ.

(Visited 1 times, 1 visits today)