ಶಿರಾ: ನಗರಸಭೆಯಲ್ಲಿ ಪೌರಕಾರ್ಮಿಕರಿಗೆ ಮೀಸಲಿಟ್ಟ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡಲಾಗಿದೆ ಎಂಬ ಆರೋಪ, ಅಕ್ರಮ ಲೇಔಟ್‌ಗಳಿಗೆ ಅನುಮೋದನೆ, ವಾರ್ಡ್ಗಳಿಗೆ ಮುನ್ಸಿಪಲ್ ಹಣಕಾಸು ನಿಧಿಗಳ ಅಸಮಾನ ಹಂಚಿಕೆ, ಸಮರ್ಪಕ ಕಸ ವಿಲೇವಾರಿ ಹಾಗೂ ಕುಡಿಯುವ ನೀರಿನ ಸಮಸ್ಯೆಗಳು ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ಸ್ಫೋಟಗೊಂಡವು. ಸದಸ್ಯರ ತೀವ್ರ ವಿರೋಧ ಹಾಗೂ ಪ್ರತಿಭಟನೆಯ ಹಿನ್ನೆಲೆಯಲ್ಲಿ ಸಾಮಾನ್ಯ ಸಭೆಯನ್ನೇ ಮುಂದೂಡಲಾಯಿತು.
ನಗರಸಭೆ ಅಧ್ಯಕ್ಷ ಜಿಶಾನ್ ಮಹಮ್ಮದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಸೇರಿದಂತೆ ಹಲವು ಸದಸ್ಯರು ನಗರಸಭೆಯ ಕಾರ್ಯವೈಖರಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಶನಿವಾರ ಆಶ್ರಯ ಕಮಿಟಿಯ ಸಭೆ ಶಾಸಕರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಅಲ್ಲಿ ಸಮಸ್ಯೆ ಬಗೆಹರಿಸುತ್ತೇವೆಂದು ಆಯುಕ್ತ ರುದ್ರೇಶ್ ಹೇಳಿದರೂ ಕೇಳದೆ ಪ್ರತಿಭಟನೆ ಮುಂದುವರಿಸಿದ ಸದಸ್ಯರು.
ಪೌರಕಾರ್ಮಿಕರಿಗೆ ಮೀಸಲಿಟ್ಟ ಜಾಗದಲ್ಲಿ ಅಕ್ರಮ ಕಟ್ಟಡ: ಪೌರಕಾರ್ಮಿಕರಿಗೆ ಮೀಸಲಿಟ್ಟಿರುವ ಜಾಗದಲ್ಲೇ ಅಕ್ರಮವಾಗಿ ಕಟ್ಟಡ ನಿರ್ಮಿಸಲು ಅವಕಾಶ ನೀಡಲಾಗಿದೆ ಎಂದು ಸದಸ್ಯರು ಆರೋಪಿಸಿದರು. ಮೀಸಲಿಟ್ಟ ಜಾಗವನ್ನೇ ನಗರಸಭೆ ರಕ್ಷಿಸಲು ಸಾಧ್ಯವಾಗದಿದ್ದರೆ ಆಡಳಿತದ ಹೊಣೆಗಾರಿಕೆ ಏನು ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
ಅಕ್ರಮ ಕಟ್ಟಡ ನಿರ್ಮಾಣದ ಕುರಿತು ತಕ್ಷಣ ಸೂಕ್ತ ಕ್ರಮ ಕೈಗೊಂಡು, ಅಕ್ರಮವನ್ನು ತೆರವುಗೊಳಿಸಬೇಕು. ಸಮಸ್ಯೆ ಬಗೆಹರಿಯುವವರೆಗೆ ಸಾಮಾನ್ಯ ಸಭೆ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಸದಸ್ಯರು ಪಟ್ಟು ಹಿಡಿದರು.
ಅಕ್ರಮ ಲೇಔಟ್‌ಗಳಿಗೆ ಅನುಮೋದನೆ ಆರೋಪ: ನಗರದ ಅಭಿವೃದ್ಧಿಯ ಹೆಸರಿನಲ್ಲಿ ನಿಯಮಗಳನ್ನು ಬದಿಗೊತ್ತಿ ಅಕ್ರಮ ಲೇಔಟ್‌ಗಳಿಗೆ ಅನುಮೋದನೆ ನೀಡಲಾಗುತ್ತಿದೆ ಎಂಬ ಗಂಭೀರ ಆರೋಪವೂ ಸಭೆಯಲ್ಲಿ ಕೇಳಿಬಂತು. ನಿಯಮಬಾಹಿರ ಲೇಔಟ್‌ಗಳಿಗೆ ಅನುಮತಿ ನೀಡುವುದರಿಂದ ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟಾಗಲಿದೆ. ಹೀಗಾಗಿ ನಿಯಮಾನುಸಾರವೇ ಲೇಔಟ್‌ಗಳಿಗೆ ಅನುಮೋದನೆ ನೀಡಬೇಕು ಎಂದು ಸದಸ್ಯರು ಒತ್ತಾಯಿಸಿದರು.
ನ್ಯಾಯ ಸಮ್ಮತವಾಗಿ ಹಂಚಿಕೆಯಾಗದ ಹಣಕಾಸು ನಿಧಿಗಳು: ನಗರಸಭೆಯ ವಿವಿಧ ಹಣಕಾಸು ನಿಧಿಗಳನ್ನು ವಾರ್ಡ್ಗಳಿಗೆ ನ್ಯಾಯಸಮ್ಮತವಾಗಿ ಹಂಚಿಕೆ ಮಾಡುತ್ತಿಲ್ಲ ಎಂಬ ಆರೋಪವೂ ತೀವ್ರವಾಗಿ ಕೇಳಿಬಂತು. ಕೆಲವು ವಾರ್ಡ್ಗಳಿಗೆ ಹೆಚ್ಚಿನ ಆದ್ಯತೆ ನೀಡಿ, ಇನ್ನು ಕೆಲವು ವಾರ್ಡ್ಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಸದಸ್ಯರು ದೂರಿದರು.
ಜನಸಂಖ್ಯೆ, ಅಗತ್ಯ ಹಾಗೂ ಸಮಸ್ಯೆಗಳ ಆಧಾರದ ಮೇಲೆ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಹಂಚಿಕೆ ಮಾಡಬೇಕು. ನಗರಸಭೆಯ ಹಣ ಎಲ್ಲ ವಾರ್ಡ್ಗಳ ಜನರ ತೆರಿಗೆ ಹಣವಾಗಿದ್ದು, ಯಾವುದೇ ವಾರ್ಡ್ಗೆ ತಾರತಮ್ಯ ಮಾಡಬಾರದು ಎಂದು ಸದಸ್ಯರು ಆಗ್ರಹಿಸಿದರು.
ಕಸ, ಚರಂಡಿ ಸಮಸ್ಯೆ; ದುರ್ವಾಸನೆಯಿಂದ ಜನರ ಪರದಾಟ: ನಗರದ ಹಲವು ವಾರ್ಡ್ಗಳಲ್ಲಿ ಸಮರ್ಪಕ ಕಸ ವಿಲೇವಾರಿ ನಡೆಯುತ್ತಿಲ್ಲ. ಮನೆಮನೆಗೆ ಕಸ ಸಂಗ್ರಹಿಸುವ ವ್ಯವಸ್ಥೆ ಇದ್ದರೂ ಹಲವೆಡೆ ಕಸದ ರಾಶಿಗಳು ಕಂಡುಬರುತ್ತಿವೆ. ಇದರಿಂದ ದುರ್ವಾಸನೆ ಹಾಗೂ ಸೊಳ್ಳೆಗಳ ಕಾಟದಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸದಸ್ಯರು ಹೇಳಿದರು.
ಚರಂಡಿಗಳನ್ನು ಸಮರ್ಪಕವಾಗಿ ಸ್ವಚ್ಛಗೊಳಿಸದ ಪರಿಣಾಮ ತ್ಯಾಜ್ಯ ಹಾಗೂ ಕೊಳಚೆ ನೀರು ನಿಂತುಕೊAಡಿದ್ದು, ಯುಜಿಡಿ ಮ್ಯಾನ್‌ಹೋಲ್‌ಗಳಿಂದ ಕೊಳಚೆ ನೀರು ರಸ್ತೆಗೆ ಹರಿಯುತ್ತಿರುವ ಸಮಸ್ಯೆಯೂ ಇದೆ. ಈ ಬಗ್ಗೆ ನಗರಸಭೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕುಡಿಯುವ ನೀರಿಗೂ ಸಮಸ್ಯೆ: ನಗರದ ಹಲವು ಪ್ರದೇಶಗಳಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ ಎಂಬ ವಿಚಾರವೂ ಸಭೆಯಲ್ಲಿ ಪ್ರತಿಧ್ವನಿಸಿತು. ತೆರಿಗೆ ಪಾವತಿಸುವ ನಾಗರಿಕರಿಗೆ ಕನಿಷ್ಠ ಮೂಲಭೂತ ಸೌಲಭ್ಯಗಳಾದ ಶುದ್ಧ ಕುಡಿಯುವ ನೀರು, ಸ್ವಚ್ಛತೆ ಹಾಗೂ ಸಮರ್ಪಕ ಕಸ ವಿಲೇವಾರಿ ಒದಗಿಸಲು ನಗರಸಭೆಗೆ ಸಾಧ್ಯವಾಗುತ್ತಿಲ್ಲವೇ ಎಂದು ಸದಸ್ಯರು ಪ್ರಶ್ನಿಸಿದರು.
ಪೌರಕಾರ್ಮಿಕರ ಜಾಗದ ಅಕ್ರಮ ಕಟ್ಟಡ, ಅಕ್ರಮ ಲೇಔಟ್‌ಗಳ ಅನುಮೋದನೆ, ಹಣಕಾಸು ನಿಧಿಗಳ ಹಂಚಿಕೆ, ಕಸ ವಿಲೇವಾರಿ, ಚರಂಡಿ, ಯುಜಿಡಿ ಹಾಗೂ ಕುಡಿಯುವ ನೀರಿನ ಸಮಸ್ಯೆಗಳನ್ನು ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದು ಸದಸ್ಯರು ಒತ್ತಾಯಿಸಿದರು.
ಈ ಕುರಿತು ನಗರಸಭೆ ಅಧ್ಯಕ್ಷ ಜಿಶಾನ್ ಮಹಮ್ಮದ್ ಹಾಗೂ ಆಯುಕ್ತ ರುದ್ರೇಶ್ ಅವರಿಗೆ ಸದಸ್ಯರು ಪತ್ರ ಸಲ್ಲಿಸಿದರು.
ಸಮಸ್ಯೆಗಳಿಗೆ ಸ್ಪಷ್ಟ ಪರಿಹಾರ ದೊರೆಯುವವರೆಗೆ ಸಾಮಾನ್ಯ ಸಭೆ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಸದಸ್ಯರು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಸಭೆಯನ್ನು ಮುಂದೂಡಲಾಯಿತು.
ನಗರಸಭೆ ಆಡಳಿತದ ವಿರುದ್ಧ ಪಕ್ಷಭೇದ ಮರೆತು ಸದಸ್ಯರು ಒಗ್ಗಟ್ಟಾಗಿ ಧ್ವನಿ ಎತ್ತಿ, ಸಾಮಾನ್ಯ ಸಭೆಯನ್ನೇ ಮುಂದೂಡಿಸಿರುವುದು ಶಿರಾ ನಗರಸಭೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಜಿಲ್ಲಾಧಿಕಾರಿ ಬರುವವರೆಗೆ ಉಪವಾಸ ಸತ್ಯಾಗ್ರಹ: ನಗರದ ಜ್ವಲಂತ ಸಮಸ್ಯೆಗಳಿಗೆ ಅಧಿಕಾರಿಗಳಿಂದ ಸ್ಪಷ್ಟ ಪರಿಹಾರ ದೊರೆಯದ ಹಿನ್ನೆಲೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಅವರು ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಸಮಸ್ಯೆಗಳನ್ನು ಚರ್ಚಿಸಿ ಇತ್ಯರ್ಥಪಡಿಸುವವರೆಗೆ ಉಪವಾಸ ಸತ್ಯಾಗ್ರಹ ಮುಂದುವರಿಸುವುದಾಗಿ ಪಟ್ಟು ಹಿಡಿದರು.
ಕೃಷ್ಣಪ್ಪ ಅವರ ಉಪವಾಸ ಸತ್ಯಾಗ್ರಹಕ್ಕೆ ಪಕ್ಷಭೇದ ಮರೆತು ೧೨ ನಗರಸಭೆ ಸದಸ್ಯರು ಬೆಂಬಲವಾಗಿ ನಿಂತರು.

(Visited 1 times, 1 visits today)