ತುಮಕೂರು:

     ಜಿಲ್ಲೆಯಲ್ಲಿ ಸೆ.21ರಿಂದ ನಡೆಯುವ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗಳು ಸುರಕ್ಷಿತ ಹಾಗೂ ಯಶಸ್ವಿಯಾಗಿ ಜರುಗುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪರವರು ಅಧಿಕಾರಿಗಳಿಗೆ ಸೂಚಿಸಿದರು.

      ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸೆಪ್ಟಂಬರ್ 21 ರಿಂದ 28 ರವರೆಗೆ ನಡೆಯುವ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯಲ್ಲಿ ಯಾವುದೇ ಲೋಪದೋಷಗಳು ಕಂಡು ಬರದಂತೆ ನಿಗಾವಹಿಸಬೇಕು. ಕೋವಿಡ್-19 ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳಲ್ಲಿ ಮುಂಜಾಗೃತ ಕ್ರಮ ಕೈಗೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬರನ್ನು ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್‍ಗೆ ಒಳಪಡಿಸಬೇಕು ಎಂದರು.

      ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಪರೀಕ್ಷಾ ಕೇಂದ್ರದ ಹೊರಾಂಗಣ ಮತ್ತು ಒಳಾಂಗಣ ಕೊಠಡಿಗಳನ್ನು ಸ್ವಚ್ಚಗೊಳಿಸಿ ಸ್ಯಾನಿಟೈಸ್ ಸಿಂಪಡಿಸಬೇಕು. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಮಾಸ್ಕ್, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಕೋವಿಡ್-19 ಸೋಂಕಿತ ಮಕ್ಕಳಿಗೆ ಪ್ರತ್ಯೇಕವಾಗಿ ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು ಇಲ್ಲಿ ಕೋವಿಡ್ ಕೇಂದ್ರದ ವೈದ್ಯರು ಅಥವಾ ಆರೋಗ್ಯ ಸಿಬ್ಬಂದಿ ಇರಲಿದ್ದು, ಅವರ ಜೊತೆಗೆ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದರು.

       ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯ 14 ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯ 7 ಸೇರಿದಂತೆ ಒಟ್ಟು 21 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ಸೂಕ್ತ ಪೆÇಲೀಸ್ ಬಂದೋಬಸ್ತ್ ಒದಗಿಸಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸಕಾಲಕ್ಕೆ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ತಿಳಿಸಿದರು.

      ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದೇಶ್, ಡಿಡಿಪಿಗಳಾದ ನಂಜಯ್ಯ, ರೇವಣ್ಣ ಸಿದ್ಧಪ್ಪ, ಜಿಲ್ಲಾ ಖಜಾನಾಧಿಕಾರಿ ಪದ್ಮಾವತಿ, ಬಿಇಓಗಳು ಹಾಜರಿದ್ದರು. 

      ಸೆ.21ರಿಂದ ನಿಷೇಧಾಜ್ಞೆ ಜಾರಿ: ಯಾವುದೇ ಲೋಪದೋಷವಿಲ್ಲದಂತೆ ಪರೀಕ್ಷೆ ನಡೆಸಲು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಡಾ|| ಕೆ.ರಾಕೇಶ್‍ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

      ನಿಷೇಧಾಜ್ಞೆಯು ಸೆಪ್ಟೆಂಬರ್ 21 ರಿಂದ ಸೆ.28ರವರೆಗೆ ಬೆಳಿಗ್ಗೆ 9 ರಿಂದ ಸಂಜೆ 5-30 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಪರೀಕ್ಷೆ ನಡೆಯುವ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚಬೇಕು. ನಿಷೇಧಿತ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿಗಳು ಪ್ರವೇಶಿಸುವಂತಿಲ್ಲ. ನಿಷೇಧವನ್ನು ಉಲ್ಲಂಘಿಸಿ ನಿಬರ್ಂಧಿತ ಪ್ರದೇಶದೊಳಗೆ ಪ್ರವೇಶಿಸಿದ ಅನಧಿಕೃತ ವ್ಯಕ್ತಿಗಳನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಪ್ರಶ್ನೆಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳು ಕಂಡುಬಂದಲ್ಲಿ ದಂಡಪ್ರಕ್ರಿಯಾ ಸಂಹಿತೆ 1973ರ ಸೆಕ್ಷನ್ 107 ಮತ್ತು 110ರ ಅಡಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

      ಪರೀಕ್ಷಾ ವೇಳಾಪಟ್ಟಿ :

      ಜಿಲ್ಲೆಯಲ್ಲಿ ಸೆಪ್ಟೆಂಬರ್ 21ರಂದು ಗಣಿತ ಹಾಗೂ ಸಮಾಜಶಾಸ್ತ್ರ; ಸೆ.22ರಂದು ಪ್ರಥಮ ಭಾಷೆ(ಕನ್ನಡ, ಉರ್ದು, ಇಂಗ್ಲೀಷ್, ಸಂಸ್ಕøತ); ಸೆ.23ರಂದು ಸಮಾಜ ವಿಜ್ಞಾನ; ಸೆ.24ರಂದು ದ್ವಿತೀಯ ಭಾಷೆ (ಕನ್ನಡ, ಇಂಗ್ಲೀಷ್); ಸೆ.25ರಂದು ತೃತೀಯ ಭಾಷೆ(ಹಿಂದಿ, ಕನ್ನಡ, ಸಂಸ್ಕøತ) ಹಾಗೂ ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‍ನೆಸ್; ಸೆ.26ರಂದು ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಅಂಡ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್, ಎಲೆಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ ಹಾಗೂ ಸೆ.28ರಂದು ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ/ ಹಿಂದೂಸ್ಥಾನಿ ಸಂಗೀತ ವಿಷಯಗಳ ಪರೀಕ್ಷೆಗಳು ನಡೆಯಲಿವೆ.

(Visited 17 times, 1 visits today)