ತುಮಕೂರು:

     ಶಿರಾ ತಾಲ್ಲೂಕಿಗೆ ಶಾಶ್ವತ ನೀರಾವರಿ ಕಲ್ಪಿಸುವ ನಿಟ್ಟಿನಲ್ಲಿ ನೀರಾವರಿಗೆ ಒತ್ತು ನೀಡಿ ಕಾರ್ಯನಿರ್ವಹಿಸುವುದಾಗಿ ಡಾ.ಸಿ.ಎಂ.ರಾಜೇಶ್ ಗೌಡ ಅವರು ತಿಳಿಸಿದರು.

      ನಗರದ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರಸ್ವಾಮೀಜಿಗಳ ಗದ್ದುಗೆ ಪೂಜೆ ಸಲ್ಲಿಸಿ, ಸಿದ್ಧಲಿಂಗಸ್ವಾಮೀಜಿ ಅವರ ಆರ್ಶೀವಾದ ಪಡೆದ ನಂತರ ಮಾತನಾಡಿದ ಅವರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೀಡಿರುವ ಭರವಸೆಯನ್ನು ಈಡೇರಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದು, ಅಧಿಕಾರಿಗಳು ಮದಲೂರು ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೆನಾಲ್ ಗಳಲ್ಲಿ ಜಂಗಲ್ ತೆರವುಗೊಳಿಸುವ ಕಾರ್ಯ ಮುಂದಿನವಾರದಿಂದ ಆರಂಭಗೊಳ್ಳಲಿದ್ದು ಮೂರು ತಿಂಗಳ ಒಳಗೆ ನೀರು ಹರಿಯಲಿದೆ ಎಂದರು.

      ಹೇಮಾವತಿ ನೀರನ್ನು ಹರಿಸುವ ನಿಟ್ಟಿನಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಸಣ್ಣನೀರಾವರಿ ಇಲಾಖೆ ಮುಖ್ಯಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರಿಗೆ ನಿರ್ದೇಶನ ನೀಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಅವರೊಂದಿಗೆ ದೂರವಾಣಿ ಮೂಲಕ ಚರ್ಚಿಸಿದ್ದು, ಚುನಾವಣೆಯಲ್ಲಿ ಜನರಿಗೆ ನೀಡಿರುವ ಭರವಸೆ ಈಡೇರಿಸಲು ಮುಂದಾಗುವಂತೆ ತಿಳಿಸಿದ್ದಾರೆ ಎಂದರು.

      ಈಗಾಗಲೇ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿ ಆರಂಭಕ್ಕೆ ಟೆಂಡರ್ ಪ್ರಕ್ರಿಯೆ ನಡೆಯುತ್ತಿದ್ದು, ಎರಡು ವರ್ಷಗಳ ಒಳಗೆ ಯೋಜನೆ ಸಂಪೂರ್ಣವಾಗಿ ಮುಗಿಯಲಿದ್ದು, ಈ ಯೋಜನೆಯಿಂದ ಶಿರಾ ತಾಲ್ಲೂಕಿನ 42 ಕೆರೆಗಳಿಗೆ ನೀರು ಹರಿಸಲಾಗುವುದು ಎಂದ ಅವರು ಹೇಮಾವತಿ ನೀರು ಮದಲೂರು ಕೆರೆಗೆ ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ ಎಂದರು.

   ಕ್ಷೇತ್ರದಲ್ಲಿ ಪ್ರವಾಸ:

      ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಶಿರಾ ತಾಲ್ಲೂಕಿನ 22 ಗ್ರಾಮಗಳಿಗೆ ಭೇಟಿ ನೀಡಿದ್ದು, ಮತದಾರರು ತಮ್ಮ ಕೆಲಸ ಕಾರ್ಯಗಳಿಗೆ ಶಾಸಕರನ್ನು ನೇರವಾಗಿ ಭೇಟಿ ಮಾಡುವಂತೆ ತಿಳಿಸಲಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲ ಗ್ರಾಮಗಳಿಗೂ ಭೇಟಿ ನೀಡಿ, ಮತದಾರರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದ ಅವರು, ಕ್ಷೇತ್ರದಲ್ಲಿರುವ ಮೂಲಸೌಕರ್ಯ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ತಿಳಿಸಿದರು.

      ಶಿರಾ ಕ್ಷೇತ್ರದಲ್ಲಿ ರಸ್ತೆ, ಚರಂಡಿ ಸೇರಿದಂತೆ ಇತರೆ ಸೌಕರ್ಯವನ್ನು ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಅವರ ಸಲಹೆ, ಸಹಕಾರ,ಮಾರ್ಗದರ್ಶನದಲ್ಲಿ ಮುಂದುವರೆಯುವುದಾಗಿ ಹೇಳಿದ ಅವರು, ಶಿರಾ ಕೋಟೆಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕ್ರಮವಹಿಸಿ, ಉತ್ತಮ ಪ್ರವಾಸಿ ತಾಣವನ್ನಾಗಿಸುವ ಮೂಲಕ ಉದ್ಯೋಗ ಸೃಷ್ಠಿಗೆ ಒತ್ತು ನೀಡುವುದಾಗಿ ತಿಳಿಸಿದರು.

      ಉದ್ದಿಮೆ ಸ್ಥಾಪನೆಗೆ ಸಹಕಾರ:

ಸೃಷ್ಠಿಸುವ ದೃಷ್ಠಿಯಿಂದ ಕೈಗಾರಿಕೆಗಳನ್ನು ಬೆಂಗಳೂರನ್ನು ಹೊರತು ಪಡಿಸಿ ಸ್ಥಾಪಿಸುವವರಿಗೆ ಸರ್ಕಾರ ಹಲವು ವಿಶೇಷ ಯೋಜನೆಗಳನ್ನು ಪ್ರಕಟಿಸಿದ್ದು, ಶಿರಾದಲ್ಲಿ ಉದ್ದಿಮೆ ಸ್ಥಾಪಿಸುವವರಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ ಅವರು, ಚೆನ್ನೈ- ಮುಂಬೈ ಕೈಗಾರಿಕಾ ಕಾರಿಡಾರ್ ನಲ್ಲಿ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ದೊರಕಿಸಲು ಪ್ರಯತ್ನಿಸುವುದಾಗಿ ತಿಳಿಸಿದರು. ಈ ವೇಳೆ ಸತೀಶ್, ಶಿವಕುಮಾರ್ ಸೇರಿದಂತೆ ಇತರರಿದ್ದರು.  

(Visited 6 times, 1 visits today)