ತುಮಕೂರು : 

      ಪ್ರವಾಸೋದ್ಯಮ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ತಿಳಿಸಿದ್ದಾರೆ.

      ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ಪ್ರವಾಸೋದ್ಯಮ ಇಲಾಖೆ ಯೋಜನೆ ಹಾಗೂ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ವಿಶೇಷ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಅನುಷ್ಠಾನಗೊಳಿಸುತ್ತಿರುವ 69 ಕಾಮಗಾರಿಗಳ ಪೈಕಿ 12 ಕಾಮಗಾರಿಗಳು ಪೂರ್ಣಗೊಂಡಿದ್ದು, ಪ್ರಗತಿಯಲ್ಲಿರುವ 46 ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಹಾಗೂ ಪ್ರಾರಂಭಿಸದೇ ಇರುವ 11 ಕಾಮಗಾರಿಗಳನ್ನು ಆದಷ್ಟು ಬೇಗ ಕೈಗೆತ್ತಿಕೊಳ್ಳಬೇಕು ಎಂದು ನಿರ್ದೇಶಿಸಿದರು.

ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿ ದಂತೆ ಸಣ್ಣ-ಪುಟ್ಟ ಕಾಮಗಾರಿಗಳ ಅನುದಾನ ಬಿಡುಗಡೆಗಾಗಿ ಕೇಂದ್ರ ಕಚೇರಿಗಳಿಗೆ ಪತ್ರ ಬರೆದು ಕಾಯುವುದು ಬೇಡ. ಅಂತಹ ಕಾಮಗಾರಿಗಳ ಬಗ್ಗೆ ತಮ್ಮ ಗಮನಕ್ಕೆ ತಂದು, ಆಡಳಿತಾತ್ಮಕ ಮಂಜೂರಾತಿಯನ್ನು ಪಡೆದು ಕಾಮಗಾರಿಗಳನ್ನು ಪ್ರಾರಂಭಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

       ತುರುವೇಕೆರೆ ತಾಲೂಕಿನಲ್ಲಿ ಐತಿಹಾಸಿಕ ಪ್ರವಾಸಿತಾಣಗಳಿದ್ದು, ಈ ಪೈಕಿ ಗಂಗಾಧ ರೇಶ್ವರ, ಕಲ್ಲೇಶ್ವರ ಹಾಗೂ ಶಂಕರೇಶ್ವರ ಸ್ವಾಮಿ ದೇವಾಲಯಗಳ ಮೂಲಭೂತ ಸೌಕರ್ಯಕ್ಕಾಗಿ ಈಗಾಗಲೇ ಒಂದು ಕೋಟಿ ರೂಗಳ ಅನುದಾನ ಬಿಡುಗಡೆಯಾಗಿದ್ದು, ಶೀಘ್ರ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದು ಅವರು ಸೂಚಿಸಿದರು. ಜಿಲ್ಲೆಯ ಪ್ರಮುಖ ಪ್ರವಾಸಿತಾಣಗಳನ್ನು ಚಿತ್ರೀಕರಿಸಿದ್ದು, ಏಪ್ರಿಲ್ 18ರ ವಿಶ್ವ ಪಾರಂಪರಿಕ ದಿನದ ಅಂಗವಾಗಿ ತಲಾ ಒಂದು ನಿಮಿಷದ ದೃಶ್ಯ ತುಣುಕನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕೆ.ಡಿ.ಪಿ ಸಭೆಗೂ ಮುನ್ನ ಪ್ರದರ್ಶನ ಮಾಡಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಜೆ. ಸುಜಾತ ಅವರಿಗೆ ಸೂಚಿಸಿದರು.

(Visited 9 times, 1 visits today)