ತುಮಕೂರು:


ನಮ್ಮ ಯುವಜನರು ಶಿಕ್ಷಣ ಪೂರೈಸಿದ ನಂತರ ಕೆಲಸ ಹುಡುಕುವ ಬದಲು ಅವರೇ ಉದ್ಯಮ ಸ್ಥಾಪಿಸಿ ಇತರರಿಗೆ ಉದ್ಯೋಗ ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ಎಲ್ಲ ಅಗತ್ಯ ಮಾಹಿತಿ ಒದಗಿಸಲು ಕೈಗಾರಿಕಾ ಇಲಾಖೆಯು ತುಮಕೂರಿನಲ್ಲಿ ಜೂನ್ 23ರಂದು ಒಂದು ದಿನದ ಕಾರ್ಯಾಗಾರ ಆಯೋಜಿಸಲಿದೆ ಎಂದು ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ತಿಳಿಸಿದರು.
ಈ ಕುರಿತು ಇಂದು ತುಮಕೂರಿನ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿದ ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಹಾಗೂ ಕೈಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದರು.
ತುಮಕೂರಿನ ಗಂಗಾಧರಯ್ಯ ಮೆಮೋರಿಯಲ್ ಹಾಲ್‍ನಲ್ಲಿ ‘ಉದ್ಯಮಿಯಾಗು ಉದ್ಯೋಗ ನೀಡು’ ಹಾಗೂ ‘ಕೈಗಾರಿಕಾ ಅದಾಲತ್’ ಕಾರ್ಯಕ್ರಮ ಆಯೋಜಿಸಲಾಗಿದ್ದು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ. ಮುರುಗೇಶ ಆರ್ ನಿರಾಣಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಕಳೆದ ವರ್ಷ ಅಕ್ಟೋಬರ್ 11ರಂದು ಬೆಂಗಳೂರಿನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. “ಮುರುಗೇಶ ಆರ್ ನಿರಾಣಿ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ನಂತರ ಮೊದಲಿಗೆ ಆದ್ಯತೆ ಮೇರೆಗೆ ಉದ್ಯಮಿಯಾಗು ಉದ್ಯೋಗ ನೀಡು ಮತ್ತು ಕೈಗಾರಿಕಾ ಅದಾಲತ್ ಕಾರ್ಯಕ್ರಮ ಆಯೋಜಿಸಿದ್ದಾರೆ. ಬೆಂಗಳೂರು, ಕಲಬುರಗಿ, ಬೆಳಗಾವಿ ಹಾಗೂ ಮೈಸೂರು ಹಾಗೂ ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿದ್ದು, ಈಗ ಕಡೆಯದಾಗಿ ಬೆಂಗಳೂರು ಕಂದಾಯ ವಲಯ-2ರಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ,” ಎಂದು ಅವರು ವಿವರಿಸಿದರು.
“ನಾಳಿನ ಕಾರ್ಯಕ್ರಮದಲ್ಲಿ 5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ. ಕಾರ್ಯಕ್ರಮದಲ್ಲಿ ಉದ್ಯಮಿಗಳಾಗುವುದು ಹೇಗೆ? ಎಲ್ಲಿ ಮತ್ತು ಹೇಗೆ ಸಾಲಸೌಲಭ್ಯ ದೊರೆಯುತ್ತದೆ? ಯಾವ ಯಾವ ಕ್ಷೇತ್ರಗಳಲ್ಲಿ ಹೂಡಿಕೆಗೆ ಅವಕಾಶ ಇದೆ ಎಂಬುದನ್ನು ತಜ್ಞರು ವಿವರಿಸಲಿದ್ದಾರೆ,” ಎಂದು ದೊಡ್ಡಬಸವರಾಜು ಅವರು ತಿಳಿಸಿದರು.
“ತುಮಕೂರಿನ ವಿದ್ಯಾರ್ಥಿಗಳು ನೇರವಾಗಿ ಕಾರ್ಯಕ್ರಮದಲ್ಲಿ ಭಾಗಿಯಾದರೆ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗದ ವಿದ್ಯಾರ್ಥಿಗಳು ವೀಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮದಲ್ಲಿ ಭಾಗಿಯಾಗುವರು. ಅದಕ್ಕೆ ಪೂರಕ ವ್ಯವಸ್ಥೆ ಕಲ್ಪಿಸಲಾಗಿದೆ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಹಾಗೂ ಹೊಸ ಉದ್ಯಮ ಆರಂಭಿಸುವವರು ಇದರ ಸದುಪಯೋಗಪಡಿಸಿಕೊಳ್ಳಬೇಕು,” ಎಂದು ಅವರು ಮನವಿ ಮಾಡಿದರು.
ಹೆಚ್ಚುವರಿ ತರಬೇತಿ “ಈ ಕಾರ್ಯಗಾರ ಒಂದು ದಿನಕ್ಕೆ ಸೀಮಿತವಾಗಿಲ್ಲ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚಿನ ತರಬೇತಿ, ಮಾರ್ಗದರ್ಶನ ನೀಡಲಾಗುತ್ತದೆ. ಅದಕ್ಕಾಗಿ ಪ್ರತಿ ಜಿಲ್ಲೆಯ 3-4 ಕೇಂದ್ರಗಳಲ್ಲಿ ಒಂದು ದಿನದ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಇದರಲ್ಲಿ 50,000 ಮಂದಿ ಭಾಗಿಯಾಗುವ ನಿರೀಕ್ಷೆ ಇದೆ. ನಂತರ 40-50 ತಾಸಿನ ಆನ್‍ಲೈನ್ ಕಾರ್ಯಕ್ರಮಕ್ಕೆ ನೋಂದಣಿ ಮಾಡಿಸಲಾಗುತ್ತದೆ. ಆಯ್ದ10,000 ಆಸಕ್ತರಿಗೆ ಅವರ ಆಸಕ್ತಿಯ ಕ್ಷೇತ್ರಗಳಲ್ಲಿ ಅಥವಾ ಐಬಿಎಂ, ವಿಪ್ರೋ, ಇನ್ಫೋಸಿಸ್,ಕಂಪನಿಗಳಲ್ಲಿ 3 ದಿನಗಳ ತರಬೇತಿ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಅಂತಿಮ ಹಂತದವರೆಗೆ ಆಸಕ್ತಿ ಕಾಯ್ದುಕೊಳ್ಳುವ 2,000 ಮಂದಿಗೆ ಮಾರ್ಗದರ್ಶಕರ ಜತೆ ನೇರ ಸಂಪರ್ಕ ಕಲ್ಪಿಸಲಾಗುತ್ತದೆ. ಈ ಪೈಕಿ ಕನಿಷ್ಠ 1,000 ಜನರಾದರೂ ಯಶಸ್ವಿ ಉದ್ಯಮಿಗಳಾಗಿ ಹೊರಹೊಮ್ಮುವ ನಿರೀಕ್ಷೆ ಇದೆ,’’ ಎಂದು ಮುಂದಿನ ಕಾರ್ಯಕ್ರಮದ ರೂಪುರೇμÉಯನ್ನು ಅವರು ವಿವರಿಸಿದರು.
“ವಿದ್ಯಾರ್ಥಿಗಳಿಗೆ ಉದ್ಯಮ ಕುರಿತ ಮಾಹಿತಿ/ತರಬೇತಿಗೆ ಪ್ರತ್ಯೇಕ ಪಠ್ಯಕ್ರಮ ರೂಪಿಸಲಾಗುವುದು. ಟೆಕ್ಸಾಕ್ ಎಂಬ ತಾಂತ್ರಿಕ ಸಂಸ್ಥೆ ಮೂಲಕ ಈ ಕಾರ್ಯಕ್ರಮ ಅನುμÁ್ಠನಗೊಳಿಸಲಾಗುವುದು,”ಎಂದು ದೊಡ್ಡ ಬಸವರಾಜು ತಿಳಿಸಿದರು.
ಕೈಗಾರಿಕಾ ಅದಾಲತ್
ಉದ್ಯಮಿಗಳ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕೈಗಾರಿಕಾ ಇಲಾಖೆಯು ತುಮಕೂರು ವಿಭಾಗದಲ್ಲಿ 2022ರ ಜೂನ್ 23 ರಂದು ಮಧ್ಯಾಹ್ನ 3.30ಕ್ಕೆ ಗಂಗಾಧರಯ್ಯ ಮೆಮೋರಿಯಲ್ ಹಾಲ್‍ನಲ್ಲಿ ‘ಕೈಗಾರಿಕಾ ಅದಾಲತ್’ ಕಾರ್ಯಕ್ರಮ ಹಮ್ಮಿಕೊಂಡಿದೆ.
ಈ ಮೂಲಕ ಸರ್ಕಾರವೇ ಉದ್ಯಮಿಗಳ ಮನೆ ಬಾಗಿಲಿಗೆ ಹೋಗಿ ಉದ್ಯಮದಾರರ ಸಮಸ್ಯೆ ಆಲಿಸಿ, ಸಮಸ್ಯೆ ಇತ್ಯರ್ಥ ಪಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಿದೆ. ತುಮಕೂರು ಭಾಗದ ಉದ್ಯಮಿಗಳ ಸಮಸ್ಯೆಗಳನ್ನು ಆಲಿಸಿ, ಸೂಕ್ತ ಪರಿಹಾರ ಸೂಚಿಸಲಾಗುತ್ತದೆ.
ವಿದ್ಯುತ್ ಸರಬರಾಜು ಕಂಪನಿ, ಪೌರಾಡಳಿತ ಇಲಾಖೆ, ನಗರಾಭಿವೃದ್ಧಿ ಇಲಾಖೆ, ನಗರ ಯೋಜನಾ ಇಲಾಖೆ, ಕಾರ್ಮಿಕ ಇಲಾಖೆ, ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ ಮುಂತಾದ ಇಲಾಖೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ ವಹಿಸಲಾಗುತ್ತದೆ. ಇದಲ್ಲದೇ, ಕೈಗಾರಿಕಾ ಘಟಕ ಸ್ಥಾಪನೆಯ ವಿವಿಧ ಹಂತದ ಅನುಮತಿ ಪಡೆಯಲು ಈ ವೇದಿಕೆ ನೆರವಾಗಲಿದೆ.
“ಜಿಲ್ಲೆಯಿಂದ ಹಲವು ಇಲಾಖೆಗಳಿಗೆ ಸಂಬಂಧಿಸಿದ 100 ಅರ್ಜಿಗಳು ಬಂದಿವೆ. ಈಗಾಗಲೇ ಕೆಲವರ ಸಮಸ್ಯೆಗೆ ಪರಿಹಾರ ಸೂಚಿಸಲಾಗಿದೆ. ಇನ್ನು ಕೆಲವು ಅರ್ಜಿಗಳ ಕುರಿತು ಸಚಿವರು ನಾಳೆ ನೇರವಾಗಿ ಉದ್ಯಮಿಗಳ ಜತೆ ಚರ್ಚಿಸಿ, ಪರಿಹಾರ ಸೂಚಿಸಲಿದ್ದಾರೆ,” ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಅಪರ ನಿರ್ದೇಶಕ ಹೆಚ್. ಎಂ. ಶ್ರೀನಿವಾಸ್ ಹೇಳಿದರು.
“ಕೈಗಾರಿಕೋದ್ಯಮಿಗಳು, ವಿವಿಧ ಕೈಗಾರಿಕೆ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಈ ‘ಕೈಗಾರಿಕಾ ಅದಾಲತ್’ನಲ್ಲಿ ಭಾಗವಹಿಸಿ, ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಬೇಕು,” ಎಂದು ಅವರು ಕೋರಿದರು. ಸುದ್ದಿಗೋಷ್ಠಿಯಲ್ಲಿ ತುಮಕೂರು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ನಾಗೇಶ್ ಪಿ. ಉಪಸ್ಥಿತರಿದ್ದರು.

(Visited 14 times, 1 visits today)