ತುಮಕೂರು:


ಹಾವೇರಿ ಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿ ಹಾಗೂ ಹಲ್ಲೆ ನಡೆಸಿದವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ ಹಾಗೂ ನಗರದ ಎಲ್ಲಾ ಪತ್ರಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಪ್ರತಿಭಟನಾನಿರತರನ್ನುದ್ಧೇಶಿಸಿ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್, ಹಾವೇರಿ ಜಿಲ್ಲೆಯ ಖಾಸಗಿ ವಾಹಿನಿಯ ವರದಿಗಾರರಾದ ವೀರಯ್ಯ ಹಿರೇಮಠ, ಶಿವು ಮಡಿವಾಳರ್ ಹಾಗೂ ಕ್ಯಾಮೆರಾಮೆನ್ ಪ್ರಕಾಶ್ ಮುಳ್ಳಳ್ಳಿ ಅವರ ಮೇಲೆ ಹಲ್ಲೆ ನಡೆದಿರುವುದು ಖಂಡನೀಯ ಎಂದರು. ಈ ಘಟನೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕವು ತೀವ್ರವಾಗಿ ಖಂಡಿಸುತ್ತದೆ. ರೈತಪರ ಹೋರಾಟರ್ಗಾತಿಯ ಹೆಸರಿನ ಮಂಜುಳಾ ಪೂಜಾರ್ ಅಸಲಿ ಮುಖವಾಡವನ್ನು ಸುದ್ದಿ ವಾಹಿನಿ ಚುಟುಕು ಕಾರ್ಯಚರಣೆ ಮೂಲಕ ಬಯಲು ಮಾಡಿದ್ದರ ಹಿನ್ನೆಲೆಯಲ್ಲಿ ಜು.2ರಂದು ಶನಿವಾರ ಮಧ್ಯಾಹ್ನ ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಮಂಜುಳಾ ಪೂಜಾರ್ ಹಾಗೂ ಅವರ ಸಹಚರರು ಸುದ್ದಿಗೋಷ್ಠಿ ನಡೆಸಿ ಹೊರ ಬರುತ್ತಿದ್ದಂತೆ ಏಕಾಏಕಿ ಖಾಸಗಿ ಸುದ್ದಿ ವಾಹಿನಿಯ ಸಿಬ್ಬಂದಿಯ ಮೇಲೆ ಹಾಡಹಗಲೇ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ನಡೆದಿರುವುದು ಮಾಧ್ಯಮ ಪ್ರತಿನಿಧಿಗಳಿಗೆ ಸೂಕ್ತ ರಕ್ಷಣೆ ಇಲ್ಲವಾಗಿದೆ ಎಂಬುದು ಸಾಬೀತಾಗಿದೆ ಎಂದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಇ.ರಘುರಾಮ್ ಮಾತನಾಡಿ, ರಾಜ್ಯದಲ್ಲಿ ಪತ್ರಕರ್ತರ ಮೇಲೆ ಹಲ್ಲೆಗಳು ನಡೆಯುತ್ತಲೇ ಇವೆ, ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕಾನೂನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
ಮಾಜಿ ಸಚಿವ ಎಸ್.ಶಿವಣ್ಣ ಮಾತನಾಡಿ, ಈ ಸಂಬಂಧ ಮುಖ್ಯಮಂತ್ರಿಗಳ ಬಳಿ ಚರ್ಚೆ ನಡೆಸಿ ಹಲ್ಲೆಕೋರರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸುವುದಾಗಿ ತಿಳಿಸಿದರು. ಪ್ರತಿಭಟನೆ ನಂತರ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಅವರ ಮುಖಾಂತರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಲಾಯಿತು.

(Visited 4 times, 1 visits today)