ತುಮಕೂರು:


ತುಮಕೂರು ವಿಶ್ವವಿದ್ಯಾನಿಲಯದ 15ನೇ ವಾರ್ಷಿಕ ಘಟಿಕೋತ್ಸವವು ಜುಲೈ 5 ರಂದು ಬೆಳಿಗ್ಗೆ 11.30 ಗಂಟೆಗೆ ತುಮಕೂರು ವಿಶ್ವವಿದ್ಯಾನಿಲಯದ ಶ್ರೀ ಡಾ: ಶಿವಕುಮಾರ ಮಹಾಸ್ವಾಮೀಜಿ ಸಭಾಂಗಣದಲ್ಲಿ ನಡೆಯಲಿದೆ.
ಗೌರವಾನ್ವಿತ ರಾಜ್ಯಪಾಲರು ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಕುಲಾಧಿಪತಿಗಳು ಆದ ಘನತೆವೆತ್ತ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆ ವಹಿಸುವರು. ಮಾನ್ಯ ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಗಳ ಸಚಿವರು ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಸಹಕುಲಾಧಿಪತಿಗಳಾದ ಡಾ: ಸಿ.ಎನ್. ಅಶ್ವತ್ಥ್ ನಾರಾಯಣ ಉಪಸ್ಥಿತರಿರುವರು.
ನವದೆಹಲಿ ಯುಜಿಸಿ ಸದಸ್ಯರು ಹಾಗೂ ವಿಶ್ರಾಂತ ಸಹ ಕುಲಪತಿಗಳು, ಇಂದಿರಾಗಾಂಧಿ, ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯ, ನವದೆಹಲಿ ಮತ್ತು ವಿಶ್ರಾಂತ ಕುಲಪತಿಗಳು, ಬಿ.ಪಿ.ಎಸ್. ಮಹಿಳಾ ವಿಶ್ವವಿದ್ಯಾನಿಲಯ, ಹರಿಯಾಣದ ಪ್ರೊ.ಸುಷ್ಮಾ ಯಾದವ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಘಟಿಕೋತ್ಸವ ಭಾಷಣ ಮಾಡುವರು.
ತುಮಕೂರು ವಿಶ್ವವಿದ್ಯಾನಿಲಯದ ಪ್ರಭಾರ ಕುಲಪತಿಗಳಾದ ಪ್ರೊ. ಕೇಶವ ಅವರು ವಿಶ್ವವಿದ್ಯಾನಿಲಯದ ವಾರ್ಷಿಕ ವರದಿ ಮಂಡಿಸುವರು.

(Visited 1 times, 1 visits today)